ಸೆ.18ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಮಮತಾ ಬ್ಯಾನರ್ಜಿ 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. 

ಮೋದಿಯವರು ಎರಡನೇ ಬಾರಿ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಮಮತಾ ಬ್ಯಾನರ್ಜಿಯವರು ಭೇಟಿ ಮಾಡುತ್ತಿದ್ದಾರೆ. 

ಬುಧವಾರ ಸಂಜೆ 4.30ರ ಸುಮಾರಿಗೆ ಮಮತಾ ಬ್ಯಾನರ್ಜಿಯವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಹಾಗೂ ಮಮತಾ ಬ್ಯಾನರ್ಜಿ ನಡುವೆ ಸಣ್ಣದಾದ ವಾಕ್ ಸಮರ ನಡೆದಿತ್ತು. ಮಮತಾ ಬ್ಯಾನರ್ಜಿಯವರು ಬಹಿರಂಗ ಸಭೆಗಳಲ್ಲಿ ಮೋದಿ ಹಾಗೂ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. 

ಶಾರದಾ ಹಾಗೂ ನಾರದಾ ಚಿಟ್ ಫಂಡ್ ಹಗರಣ ಪ್ರಕರಣಗಳ ಸಂಬಂಧ ಜಾರಿ ನಿರ್ದೇಶಾನಯ ಹಾಗೂ ಸಿಬಿಐ ಸಿಎಂಸಿ ನಾಯಕರ ಮೇಲೆ ತನಿಖೆ ಆರಂಭಿಸಿದ್ದು, ಈ ಸಂದರ್ಭದಲ್ಲಿ ಇಬ್ಬರು ನಾಯಕರ ಭೇಟಿ ಮಹತ್ವವನ್ನು ಪಡೆದುಕೊಂಡಿದೆ. 

ಇಬ್ಬರು ನಾಯಕರು ಯಾವ ವಿಚಾರವಾಗಿ ಮಾತುಕತೆ ನಡೆಸುತ್ತಾರೆಂಬುದು ನನಗೆ ತಿಳಿದಿಲ್ಲ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ಅವರು ಹೇಳಿದ್ದಾರೆ. 

ಮಮತಾ ಬ್ಯಾನರ್ಜಿಯವರ ಭೇಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ಅವರು, ಚುನಾವಣೆ ವೇಳೆ ಹಾಗೂ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿಯವರು ಪ್ರಧಾನಿ ಮೋದಿಯವರ ವಿರುದ್ಧ ಯಾವ ರೀತಿಯ ಭಾಷೆ ಬಳಕೆ ಮಾಡಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಒಕ್ಕೂಟ ವ್ಯವಸ್ಥೆಯನ್ನು ಅವರು ಎಂದಿಗೂ ಪರಿಗಣಿಸಿಲ್ಲ. ದೇಶದ ಪ್ರಧಾನಿಗಳಿಗೆ ಗೌರವ ನೀಡುವ ಅಗತ್ಯವಿದೆ ಎಂಬುದು ಅವರಿಗೆ ತಿಳಿದಿಲ್ಲ. ರಹಸ್ಯವಾಗಿ ಇದ್ದಕ್ಕಿದ್ದಂತೆ ದೆಹಲಿಗೆ ಯಾವ ಕಾರಣಕ್ಕೆ ಹೋಗಿದ್ದಾರೆ?. ಮಮತಾ ಅವರ ನಡೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಮಮತಾ ಅವಕಾಶವಾದಿ ರಾಜಕಾರಣಿಯಾಗಿದ್ದು, ಕೆಲಸ ಮುಗಿದ ಬಳಿಕ ಎಲ್ಲವನ್ನೂ ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. 

ಸಿಎಂಸಿ ನಾಯಕರು ಸಿಬಿಐ ತನಿಖೆಯನ್ನು ಎದುರಿಸಬೇಕಾಗಿರುವುದರಿಂದ ಇದರಿಂದ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಮಮತಾ ಮೋದಿಯವರೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದಾರೆಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com