ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
ಜಾರಿ ನಿರ್ದೇಶನಾಲಯ(ಇಡಿ)ದ ಪರ ವಕೀಲರು ಆಗಮಿಸದ ಹಿನ್ನೆಲೆಯಲ್ಲಿ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
ಜಾರಿ ನಿರ್ದೇಶನಾಲಯದ ಪರ ಕಿರಿಯ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಯಿತು.
ಡಿಕೆ ಶಿವಕುಮಾರ್ ಪರ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ ಅವರು, 7 ಬಾರಿ ಶಾಸಕರಾಗಿರುವ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ತಿಳಿಸಿದರು.
ಡಿಕೆ ಶಿವಕುಮಾರ್ ಅವರು ಅಫಿಡವಿಟ್ನಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ನೀಡಿದ್ದರೆ ಅವರು ಅನರ್ಹರಾಗುತ್ತಾರೆ ಎಂದು ಡಿಕೆಶಿ ಪರ ವಕೀಲರು ವಾದಿಸಿದರು.
ಅಫಿಡವಿಟ್ನಲ್ಲಿ ಘೋಷಣೆ ಮಾಡಿರುವ ಆಸ್ತಿ ಅಕ್ರಮ ಎಂದು ಬಿಂಬಿಸಲಾಗುತ್ತಿದೆ. ಘೋಷಣೆ ಮಾಡಿರುವ 800 ಕೋಟಿ ರೂ. ಆಸ್ತಿ ಅಕ್ರಮ ಆಸ್ತಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿಂಬಿಸುತ್ತಿದ್ದಾರೆ ಎಂದು ಸಿಂಘ್ವಿ ವಾದಿಸಿದರು.
ಡಿಕೆ ಶಿವಕುಮಾರ್ ಅವರ ಇಡಿ ಕಸ್ಟಡಿ ಅವಧಿ ನಿನ್ನೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆದರೆ ಅನಾರೋಗ್ಯದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement