ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣೆ ಮುಂದೂಡುತ್ತೇವೆ: ಸುಪ್ರೀಂಗೆ ಚುನಾವಣಾ ಆಯೋಗ

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡುವುದಾಗಿ ಕೇಂದ್ರ ಚುನಾವಣಾ ಆಯೋಗದ ಪರ ವಕೀಲರು ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.
ಅನರ್ಹ ಶಾಸಕರು
ಅನರ್ಹ ಶಾಸಕರು

ನವದೆಹಲಿ: ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡುವುದಾಗಿ ಕೇಂದ್ರ ಚುನಾವಣಾ ಆಯೋಗದ ಪರ ವಕೀಲರು ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

ಇಂದು ಸತತ ಎರಡನೇ ದಿನವೂ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ಕುರಿತು ವಿಸ್ತೃತ ವಿಚಾರಣೆಯ ಅಗತ್ಯ ಇದೆ ಎಂದು ಹೇಳಿತು. ಈ ವೇಳೆ ಚುನಾವಣಾ ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಅವರು, ಹಾಗಾದರೆ 15 ಕ್ಷೇತ್ರಗಳ ಉಪ ಚುನಾವಣೆಯನ್ನು ಕೆಲ ಸಮಯ ಮುಂದೂಡುವಂತೆ ನಾನು ಚುನಾವಣಾ ಆಯೋಗಕ್ಕೆ ಕೇಳಿಕೊಳ್ಳುತ್ತೇನೆ ಎಂದರು. 

ಆಯೋಗದ ಪರ ವಕೀಲರ ಹೇಳಿಕೆಗೆ ಸಮ್ಮತಿ ಸೂಚಿಸಿದ ಅನರ್ಹ ಶಾಸಕರ ಪರ ವಕೀಲರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪರ ವಕೀಲರು ಹಾಗೂ ಇತರೆ ಪ್ರತಿವಾದಿಗಳು ಸಹ ಉಪ ಚುನಾವಣೆ ಮುಂದೂಡಿಕೆಗೆ ನಮ್ಮ ಆಕ್ಷೇಪ ಇಲ್ಲ ಎಂದು ಹೇಳಿದರು. ಹೀಗಾಗಿ ಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

ಉಪ ಚುನಾವಣೆ ಮುಂದೂಡಿಕೆಗೆ ಅನರ್ಹ ಶಾಸಕರು ಸಂತಸ ವ್ಯಕ್ತಪಡಿಸಿದ್ದು, ನ್ಯಾಯಾಲಯದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದು ರಾಜರಾಜೇಶ್ವರಿನಗರ ಅನರ್ಹ ಕಾಂಗ್ರೆಸ್ ಶಾಸಕ ಮುನಿರತ್ನ ಹೇಳಿದ್ದಾರೆ.

ಉಪ ಚುನಾವಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ‌ನೀಡಿ, ಪ್ರಕರಣದ ಬಗ್ಗೆ ವ್ಯಾಪಕ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಸ್ಪೀಕರ್ ಉದ್ದೇಶಪೂರ್ವಕವಾಗಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗಲಿದೆ. ಸ್ಪೀಕರ್ ಕಾಂಗ್ರೆಸ್ ಪಕ್ಷದ ಪರವಾಗಿ‌ ತೀರ್ಪು ಕೊಟ್ಟಿದ್ದಾರೆ ಹೊರತು‌ ನ್ಯಾಯಯುತ ತೀರ್ಪು ನೀಡಿಲ್ಲ ಎಂದರು.

ಆರ್.ಶಂಕರ್ ಮಾತನಾಡಿ, ನ್ಯಾಯಾಲಯ ಉಪಚುನಾವಣೆಗೆ ತಡೆ ನೀಡಿದೆ. ನನ್ನ ಕ್ಷೇತ್ರಕ್ಕೆ ಚುನಾವಣೆಯೇ ನಡೆಯಬೇಕಿರಲಿಲ್ಲ. ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ ಜತೆ‌ ವಿಲೀನ ಮಾಡಿರಲಿಲ್ಲ.‌ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ರಾಜರಾಜೇಶ್ವರಿ ನಗರ ಹಾಗೂ ಮಸ್ಕಿ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿತ್ತು‌.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com