ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ಕಟ್ಟಿ ಹಾಕುವುದಕ್ಕಾಗಿ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹೇಳಿದ್ದಾರೆ.
ದೇಶದಲ್ಲಿ ಲಾಕ್ ಡೌನ್ ಘೋಷಿಸಿದ ನಂತರ ಇಂದು ಮೊದಲ ಬಾರಿಗೆ ಸರ್ವಪಕ್ಷಗಳ ಸಂಸದರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮೋದಿ, ಲಾಕ್ಡೌನ್ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಏಪ್ರಿಲ್ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 14 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮೋದಿ, ಏಕಕಾಲಕ್ಕೆ ಲಾಕ್ ಡೌನ್ ಅನ್ನು ತೆರವುಗೊಳಿಸುವುದಿಲ್ಲ. ಈ ಬಗ್ಗೆ ರಾಜ್ಯಗಳ ಎಲ್ಲಾ ಸಿಎಂಗಳ ಜೊತೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ, ಕಠಿಣ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಂಸದರಿಗೆ ತಿಳಿಸಿದ್ದಾರೆ.
ಇನ್ನೂ ಸರ್ವಪಕ್ಷ ಸಭೆಯ ಬಳಿಕ ಪಿಟಿಐಗೆ ಪ್ರತಿಕ್ರಿಯಿಸಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಏಪ್ರಿಲ್ 14ರ ನಂತರ ಲಾಕ್ ಡೌನ್ ಅನ್ನು ಒಂದೇ ಬಾರಿಗೆ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ಸಭೆಯ ಬಳಿಕ ಬಿಜು ಜನತಾ ದಳದ ಸಂಸದ ಪಿನಾಕಿ ಮಿಶ್ರಾ ಅವರು ಹೇಳಿದ್ದಾರೆ.
Advertisement