ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸಿಆರ್'ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದ ಓರ್ವ ಉಗ್ರನನ್ನು ಭಾರತೀಯ ಸೇನಾಪಡೆ ಸದೆಬಡಿದಿದೆ ಎಂದು ಸೋಮವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಸಿಆರ್'ಪಿಎಫ್ ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದ ಉಗ್ರರು, ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರನ್ನು ಬಲಿಪಡೆದುಕೊಂಡಿದ್ದರು.
ದಾಳಿ ಬಳಿಕ ಸ್ಥಳವನ್ನು ಸುತ್ತುವರೆದಿದ್ದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಹತ್ಯೆಗೈಯ್ಯಲಾಗಿರುವ ಉಗ್ರನ ಮೃತದೇಹವನ್ನು ಭದ್ರತಾಪಡೆಗಳು ವಶಕ್ಕೆ ಪಡೆದುಕೊಂಡಿದ್ದು, ಸ್ಥಳದಲ್ಲಿ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ದಾಳಿ ಹಿಂದೆ ಮೂವರು ಎಲ್ಇಟಿ ಉಗ್ರರಿದ್ದಾರೆ: ಐಜಿಪಿ ವಿಜಯ್ ಕುಮಾರ್
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ದಾಳಿ ನಡೆಸಿದ್ದಾರೆಂದು ಹೇಳಿದ್ದಾರೆ.
ಕ್ರೀರಿ ಪ್ರದೇಶದಲ್ಲಿರುವ ಚೆಕ್ ಪೋಸ್ಟ್ ನಲ್ಲಿ ಏಕಾಏಕಿ ದಾಳಿ ನಡೆಸಿದ ಮೂವರು ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಉಗ್ರರಿಗೆ ತಕ್ಕ ಉತ್ತರ ನೀಡಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Advertisement