ಅದಾನಿ ಗ್ರೂಪ್ ಗೆ ವಿಮಾನ ನಿಲ್ದಾಣ ಗುತ್ತಿಗೆ ನೀಡುವ ನಿರ್ಧಾರಕ್ಕೆ ಸಹಕರಿಸುವುದು ಕಷ್ಟ:ಪ್ರಧಾನಿಗೆ ಕೇರಳ ಸಿಎಂ ಪತ್ರ
ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರಂ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರ ಮಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮತ್ತು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಜಾರಿಗೆ ತರುವಲ್ಲಿ ಸಹಕರಿಸಲು ಕೇರಳ ರಾಜ್ಯಕ್ಕೆ ಕಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಜೈಪುರ, ಗುವಾಹಟಿ ಮತ್ತು ತಿರುವನಂತಪುರ ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಇ) ಅದಾನಿ ಗ್ರೂಪ್ ಗೆ ಲೀಸ್ ಗೆ ಕೊಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ಬಿಡ್ಡಿಂಗ್ ಪ್ರಕ್ರಿಯೆ ನಂತರ ಪಿಪಿಇ ಮಾದರಿಯಲ್ಲಿ ಲಕ್ನೊ,ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳನ್ನು ನಡೆಸಿಕೊಂಡು ಹೋಗಲು ಅದಾನಿ ಗ್ರೂಪ್ ಹಕ್ಕು ಹೊಂದಿತು.
ರಾಜ್ಯ ಸರ್ಕಾರದ ಒಪ್ಪಿಗೆಯಿಲ್ಲದೆ, ಇಲ್ಲಿ ಅದಕ್ಕೆ ಪರಿಸ್ಥಿತಿ ಅನುಕೂಲವಿಲ್ಲದೆ ಅದಾನಿ ಗ್ರೂಪ್ ಗೆ ವಿಮಾನ ನಿಲ್ದಾಣ ನಿರ್ವಹಣೆಯನ್ನು ಹಸ್ತಾಂತರಿಸುವುದು ಕಷ್ಟವಾಗುತ್ತದೆ, ರಾಜ್ಯದ ಜನತೆಗೆ ಆಶಯಕ್ಕೆ ವಿರುದ್ಧವಾಗುತ್ತದೆ. ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಮರು ಪರಿಶೀಲಿಸಬೇಕೆಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಪ್ರಧಾನಿಯವರನ್ನು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ