ಲಖನೌ: ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಪಕ್ಷಕ್ಕೆ ಮುಜುಗರ ಉಂಟಾಗಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಕಳೆದುಕೊಂಡಿದೆ. ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಗಳು ಸಮಾಜವಾದಿ ಪಕ್ಷದ ಅಭ್ಯರ್ಥಿಗಳೆದುರು ಸೋತಿದ್ದಾರೆ.
ಸಮಾಜವಾದಿ ಪಕ್ಷದ ಅಶುತೋಶ್ ಸಿನ್ಹಾ ವಾರಾಣಸಿಯ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ, ಮತ್ತೋರ್ವ ಎಸ್ ಪಿ ಅಭ್ಯರ್ಥಿ ಲಾಲ್ ಬಿಹಾರಿ ಯಾದವ್ ಶಿಕ್ಷಕರ ಕ್ಷೇತ್ರವನ್ನು ಗೆದ್ದುಕೊಂಡಿದ್ದಾರೆ.
ಈ ಗೆಲುವು ಪಕ್ಷಕ್ಕೆ ಅತ್ಯಂತ ದೊಡ್ಡ ಮಟ್ಟದ ಗೆಲುವಾಗಿದೆ, ಫಲಿತಾಂಶದ ಬಗ್ಗೆ ಸಂತಸ ಉಂಟಾಗಿದೆ ಎಂದು ಲಾಲ್ ಬಿಹಾರಿ ಯಾದವ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ಎರಡು ಕ್ಷೇತ್ರಗಳ ಫಲಿತಾಂಶ ಬಾಕಿ ಇದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಸಮಾಜವಾದಿ ಪಕ್ಷ ಮೂರು ಹಾಗೂ ಪಕ್ಷೇತರರು ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದಾರೆ. ಸಮಾಜವಾದಿ ಪಕ್ಷ ಬಿಜೆಪಿಯ ಭದ್ರಕೋಟೆಯಲ್ಲಿ ಗೆದ್ದಿರುವುದು ಅಚ್ಚರಿ ಮೂಡಿಸಿದೆ.
Advertisement
Advertisement