ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಹೊಸ ದಿನಾಂಕ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಿನ್ನೆ ನಡೆಸಿದ ಸುಪ್ರೀಂ ಕೋರ್ಟ್, ಅಪರಾಧಿಗಳ ಯಾವುದೇ ಮನವಿಗಳು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಉಳಿದಿಲ್ಲದಿರುವುದರಿಂದ ಮತ್ತು ನಾಲ್ವರಲ್ಲಿ ಮೂವರ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿಗಳು ತಿರಸ್ಕರಿಸಿರುವುದರಿಂದ ನಾಲ್ಕನೇ ಅಪರಾಧಿ ಕ್ಷಮಾದಾನ ಅರ್ಜಿಯನ್ನು ಇನ್ನೂ ಸಲ್ಲಿಸದಿರುವುದರಿಂದ ಗಲ್ಲುಶಿಕ್ಷೆಗೆ ವಿಚಾರಣಾಧೀನ ನ್ಯಾಯಾಲಯ ಹೊಸ ದಿನಾಂಕವನ್ನು ನಿಗದಿಪಡಿಸಬಹುದು ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್, ಎ ಎಸ್ ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ, ದೆಹಲಿ ಸರ್ಕಾರದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ ಮನವಿಯನ್ನು ಪಟ್ಟಿ ಮಾಡಿತು. ದೆಹಲಿ ಹೈಕೋರ್ಟ್ ಫೆಬ್ರವರಿ 17ರಂದು ನಾಲ್ವರು ಅಪರಾಧಿಗಳಿಗೆ ನೀಡಲಾಗಿದ್ದ ಗಲ್ಲುಶಿಕ್ಷೆ ದಿನಾಂಕಕ್ಕೆ ತಡೆನೀಡಲು ನಿರಾಕರಿಸಿತ್ತು.
ಅಪರಾಧಿಗಳ ಕ್ಷಮಾದಾನ ಅರ್ಜಿ ವಿಚಾರಣೆ ಬಾಕಿ ಉಳಿದಿರುವುದನ್ನು ವಿಚಾರಣಾ ನ್ಯಾಯಾಲಯ ತನ್ನ ಪ್ರಕ್ರಿಯೆಗೆ ಅಡಚಣೆ ಎಂದು ಭಾವಿಸಬೇಕಾಗಿಲ್ಲ ಎಂದು ಕೂಡ ಕೋರ್ಟ್ ಹೇಳಿತು.
Advertisement