ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಅಧ್ಯಕ್ಷ-ಕಾರ್ಯದರ್ಶಿಗಳ ನೇಮಕ
ಲಖನೌ: ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಅಧ್ಯಕ್ಷ-ಕಾರ್ಯದರ್ಶಿಗಳ ನೇಮಕ ಮಾಡಲಾಗಿದ್ದು, ಪ್ರಧಾನಿ ಮೋದಿ ಆಪ್ತರೆಂದು ಹೇಳಲಾಗುತ್ತಿರುವ ನೃಪೇಂದ್ರ ಮಿಶ್ರಾ ಅವರಿಗೆ ದೇಗುಲ ನಿರ್ಮಾಣ ಸಮಿತಿಯಲ್ಲಿ ಪ್ರಮುಖ ಪಾತ್ರ ನೀಡಲಾಗಿದೆ ಎನ್ನಲಾಗಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಚುರುಕುಗೊಂಡಿದ್ದು, ಬುಧವಾರ ದಹೆಲಿಯಲ್ಲಿ ಹಿರಿಯ ವಕೀಲ ಕೆ. ಪರಸಾನ್ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಶ್ರೀರಾಮ ಮಂದಿರ ಟ್ರಸ್ಟ್ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗ್ಯಾನೇಶ್ ಕುಮಾರ್ ಮತ್ತು ಉತ್ತರ ಪ್ರದೇಶ ಸರ್ಕಾರದ ಪ್ರತಿನಿಧಿಯಾಗಿ ಅವಿನಾಶ್ ಅವಾಸ್ತಿ ಹಾಗೂ ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಕುಮಾರ್ ಝಾ ಹಾಜರಿದ್ದರು.
ರಾಮ ಮಂದಿರ ಟ್ರಸ್ಟ್ ಅಧ್ಯಕ್ಷರಾಗಿ ವಿಶ್ವ ಹಿಂದೂ ಪರಿಷತ್ ನ ರಾಮಜನ್ಮಭೂಮಿ ನ್ಯಾಸ್ ಮತ್ತು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಆರೋಪಿಗಳಾಗಿರುವ ಮಹಾಂತ್ ಗೋಪಾಲ್ ದಾಸ್ ರನ್ನು ಆಯ್ಕೆ ಮಾಡಲಾಗಿದೆ. ಅಂತೆಯೇ ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವಹಿಂದೂ ಪರಿಷತ್ ನ ಚಂಪತ್ ರೈರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರಟರಿ ಆಗಿದ್ದ ನೃಪೇಂದ್ರ ಮಿಶ್ರಾರನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮುಖ್ಯಸ್ಥರಾಗಿ ನೇಮಿಸಲಾಯಿತು.
ರಾಮ ಮಂದಿರ ನಿರ್ಮಾಣ ಕಾರ್ಯವನ್ನು ವೇಗದಲ್ಲಿ ನಡೆಸುವ ಉದ್ದೇಶದಿಂದ ಸಮಿತಿಯನ್ನು ರಚಿಸಲಾಗಿದ್ದು, ಈ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಏಳು ಸದಸ್ಯರು, ಐವರು ನಾಮನಿರ್ದೇಶನ ಸದಸ್ಯರು ಹಾಗೂ ಮೂವರು ಟ್ರಸ್ಟಿಗಳು ಇರಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ