ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಈ ವರೆಗೂ ಸಾವನ್ನಪ್ಪಿರುವವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಜಿಟಿಬಿ ಆಸ್ಪತ್ರೆಯ ವೈದ್ಯಾಧಿಕಾರಿ ಸುನಿಲ್ ಕುಮಾರ್ ಅವರು ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಇಂದು ನಾಲ್ಕು ಮಂದಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾದಂತಾಗಿದೆ.
ಇನ್ನು ದೆಹಲಿ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಸುದೀರ್ಘ ಚರ್ಚೆ ನಡೆಸಿದರು. ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ನಂತರ ಮಾತನಾಡಿರುವ ಅರವಿಂದ ಕೇಜ್ರಿವಾಲ್, ‘ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಆತಂಕಕ್ಕೀಡು ಮಾಡಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುಲಾಗುವುದು. ಅಗತ್ಯ ಬಿದ್ದರೆ ಸೇನೆಯನ್ನು ಕರೆಸಿಕೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ಗೃಹ ಸಚಿವರು ನೀಡಿದ್ದಾರೆ‘ ಎಂದು ತಿಳಿಸಿದ್ದಾರೆ.
‘ತಮ್ಮ ಮೇಲಿನ ಅಧಿಕಾರಿಗಳು ಆಜ್ಞೆ ಮಾಡದ ಹೊರತು ತಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಈ ವಿಚಾರವಾಗಿ ಕೇಂದ್ರ ಗೃಹ ಸಚಿವರ ಬಳಿ ಮಾತನಾಡುತ್ತೇನೆ. ಅಗತ್ಯ ಬಿದ್ದರೆ ಹೊರಗಿನವರು ಒಳನುಸುಳದಂತೆ ದೆಹಲಿಯ ಸರಹದ್ದುಗಳನ್ನು ಮುಚ್ಚಲಾಗುವುದು ಎಂದು ದೆಹಲಿ ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.
Advertisement