ನವದೆಹಲಿ: ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ "ದಾರಿತಪ್ಪಿಸುವ" ಟ್ವೀಟ್ಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಹುಜಾ ಸೋಮವಾರ ತಿರಸ್ಕರಿಸಿದ್ದಾರೆ.
ಮಾತ್ರವಲ್ಲ ಈ ಸಂಬಂಧ ಮಾರ್ಚ್ 17 ರೊಳಗೆ ಮತ್ತೊಂದು ವರದಿಯನ್ನು ಸಲ್ಲಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಸಿಸೋಡಿಯಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ದೂರು ದಾಖಲಿಸಿದ್ದರು.
ಚುನಾವಣೆಯಲ್ಲಿ ಸೋಲುವ ಭೀತಿಯಿಂದ ದೆಹಲಿಯಲ್ಲಿ ಬಿಜೆಪಿ ಬೆಂಕಿ ಇಟ್ಟಿದೆ. ಎಎಪಿ ಯಾವುದೇ ರೀತಿಯ ಹಿಂಸಾಚಾರವನ್ನು ವಿರೋಧಿಸುತ್ತದೆ. ಪೊಲೀಸರ ರಕ್ಷಣೆಯಲ್ಲಿ ಯುವಕರು ಹೇಗೆ ಬೆಂಕಿ ಇಡುತ್ತಿದ್ದಾರೆ ನೋಡಿ ಎಂದು ಹೇಳಿ ಸಿಸೋಡಿಯಾ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ಈ ಪೋಸ್ಟ್'ಗೆ ಸಂಬಂಧಿಸಿದಂತೆ ಸಿಸೋಡಿಯಾ ವಿರುದ್ಧ ವಕೀಲ ಅಲೋಕ್ ಶ್ರೀವಾಸ್ತವ ದೂರು ದಾಖಲಿಸಿದ್ದರು.
ದುರುದ್ದೇಶಪೂರಿತ ಟ್ವೀಟ್ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಸಿಸೋಡಿಯಾ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಎಂದು ವಕೀಲರು ದೂರು ನೀಡಿದ್ದರು. ಈ ದೂರಿನ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಾಹುಜಾ, ಕ್ರಮ ತೆಗೆದುಕೊಂಡ ವರದಿ( ಎಟಿಆರ್ ) ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದರು.
ಇದರಂತೆ ನಿನ್ನೆಯಷ್ಟೇ ವರದಿ ಸಲ್ಲಿಸಿದ್ದ ದೆಹಲಿ ಪೊಲೀಸರು, ಮನೀಷ್ ಸಿಸೋಡಿಯಾ ಸುದ್ದಿ ಚಾನೆಲ್ ಗಳಲ್ಲಿ ಹರಿದಾಡುತ್ತಿದ್ದ ವಿಡಿಯೋ ಕ್ಲಿಪ್ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಅಪರಾಧವನ್ನು ಮಾಡಿಲ್ಲ ಎಂದು ಹೇಳುವ ಮೂಲಕ ಸಿಸೋಡಿಯಾ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಇದೀಗ ಈ ಕ್ಲಿನ್ ಚಿಟ್ ನ್ನು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ್ದಾರೆ.
Advertisement