ಇಂಫಾಲ್: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸರ್ಕಾರ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡಿಸಲು ಶೀಘ್ರವೇ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರನ್ನು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.
ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ನೀಡುವಂತೆ ಒಕ್ರಮ್ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ರಾಜ್ಯಪಾಲೆ ನಜ್ಮಾ ಹೆಪ್ತುಲ್ಲಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅಲ್ಲದೆ ವಿಧಾನಸಭೆ ಸ್ಪೀಕರ್ ವೈ ಖೇಮ್ಚಂದ್ ಅವರನ್ನು ವಜಾಗೊಳಿಸುವಂತೆ ನೋಟಿಸ್ ನೀಡಿದ್ದಾರೆ.
ಇಬೋಬಿ ಸಿಂಗ್ ಅವರು ಟಿಎಂಸಿ, ಎನ್ ಪಿಪಿ ಮತ್ತು ಪಕ್ಷೇತರ ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ.
ನಿನ್ನೆ ರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನವಾಗುವ ಹಂತಕ್ಕೆ ತಲುಪಿದ್ದು, ಬಿಜೆಪಿಯ ಮೂವರು ಸೇರಿ ಒಂಬತ್ತು ಶಾಸಕರು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದರು.
ಮೂವರು ಬಿಜೆಪಿ ಶಾಸಕರು ಈಗಾಗಲೇ ಶಾಸಕ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ.
ಒಂಬತ್ತು ಶಾಸಕರ ಬಲ ಕಳೆದುಕೊಂಡ ಬಿಜೆಪಿ ಸರ್ಕಾರ ಈಗ ಅಲ್ಪ ಮತಕ್ಕೆ ಕುಸಿದಿದ್ದು, 60 ಸದಸ್ಯಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿ ಬಲ 23ಕ್ಕೆ ಇಳಿದಿದೆ.
Advertisement