ನವದೆಹಲಿ: ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾ ಅಂತಿಮ ಹಂತಕ್ಕೆ ತಲುಪಿದೆ ಎಂದು ಹೇಳುತ್ತಿರುವ ನಡುವಲ್ಲೇ, ವಿಶ್ವಾಸಮತಯಾಚನೆಗೂ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಅವರು ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಆಡಳಿತಾರೂಢ ಪಕ್ಷದ ವಿರುದ್ಧ 22 ಶಾಸಕರು ಬಂಡೆದ್ದು ಸಂಕಷ್ಟದಲ್ಲಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುಕ್ರವಾರ ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಈ ನಡುವಲ್ಲೇ 16 ಬಂಡಾಯ ಶಾಸಕರ ರಾಜೀನಾಮೆಯನ್ನು ಸ್ವೀಕರ್ ಅಂಗೀಕರಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ವಿಶ್ವಾಸಮತಯಾಚನೆಗೂ ಮುನ್ನವೇ ಕಮಲನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಕಮಲ್ ನಾಥ್ ಅವರು ಪತ್ರಿಕಾಗೋಷ್ಟಿ ಕರೆದಿದ್ದು, ಬಳಿಕ ವಿಶ್ವಾಸ ಯಾಚನೆ ಮಾಡದೆಯೇ ರಾಜೀನಾಮೆ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಶುಕ್ರವಾರ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ವಿಧಾನಸಭೆ ಸಬಾಪತಿ ಎನ್.ಪಿ.ಪ್ರಜಾಪತಿಯವರಿಗೆ ಸೂಚಿಸಿತ್ತು.
Advertisement