ಮಧ್ಯ ಪ್ರದೇಶ: ಕಮಲ್ ನಾಥ್ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಇದು ಜನರ ಗೆಲುವು ಎಂದ ಸಿಂಧಿಯಾ

ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ.
ಸಿಎಂ ಕಮಲ್ ನಾಥ್
ಸಿಎಂ ಕಮಲ್ ನಾಥ್
Updated on

ಭೋಪಾಲ್: ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಬೃಹನ್ನಾಟಕಕ್ಕೆ ತೆರೆ ಬಿದ್ದಿದೆ.

ಇಂದು ಸಂಜೆಯ ವೇಳೆಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವಂತೆ ಕಮಲ್ ನಾಥ್ ಅವರಿದೆ ಗುರುವಾರ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಬಂಡಾಯ ಕಾಂಗ್ರೆಸ್ ಶಾಸರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಹಿನ್ನೆಲೆಯಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಹೀಗಾಗಿ ಕಮಲ್ ನಾಥ್ ಅವರು ವಿಶ್ವಾಸಮತಕ್ಕೂ ಮುನ್ನವೇ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಕಮಲ್ ನಾಥ್ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಅವರಿಗೆ ಸೂಚಿಸಲಾಗಿದೆ ಎಂದು ರಾಜಭವನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿ ಸೇರಿಕೊಂಡ ನಂತರ ಅವರ ಬೆಂಬಲಿಗ 22 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕಮಲ್ ನಾಥ್ ರಾಜೀನಾಮೆ ನೀಡಿದ್ದು, ೧೫ ತಿಂಗಳ ಕಾಂಗ್ರೆಸ್ ಪತನವಾಗಿದೆ.

ಇನ್ನು ಕಮಲ್ ನಾಥ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಇದು ಜನರ ಗೆಲುವು ಎಂದು ಹೇಳಿದ್ದಾರೆ.

ರಾಜಕೀಯ ಜನರ ಸೇವೆ ಮಾಡುವ ಮಾಧ್ಯಮವಾಗಬೇಕು. ಆದರೆ ಕಮಲ್ ನಾಥ್ ನೇತೃತ್ವದ ಸರ್ಕಾರ ಹಾದಿ ತಪ್ಪಿತ್ತು. ಸತ್ಯ ಮೇಲುಗೈ ಸಾಧಿಸಿದೆ ಎಂದು ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಇಂದು ರಾಜೀನಾಮೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಕಮಲ್ ನಾಥ್ ಅವರು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ೧೫ ತಿಂಗಳ ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ದೂರಿದರು.

ತಮ್ಮ ಪಕ್ಷಕ್ಕೆ ಸೇರಿದ ಶಾಸಕರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ. ಐದು ವರ್ಷಗಳ ಕಾಲ ಅಧಿಕಾರ ನಡೆಸಲು ತಮಗೆ ಜನಾದೇಶ ನೀಡಿದ್ದರೂ ಬಿಜೆಪಿ ಅದರ ವಿರುದ್ಧ ಪಿತೂರಿ ನಡೆಸಿ, ನಮ್ಮ ಶಾಸಕರನ್ನು ಬಿಜೆಪಿ ನಾಯಕರು ನೂರಾರು ಕೋಟಿ ರೂಪಾಯಿಗಳಿಗೆ ಖರೀದಿಸಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com