ಮಹಾರಾಷ್ಟ್ರ: ಮಾಜಿ ಕೇಂದ್ರ ಸಚಿವ ಜಯಸಿಂಗ್ ರಾವ್ ಗಾಯಕ್ವಾಡ್ ಬಿಜೆಪಿಗೆ ರಾಜೀನಾಮೆ
ಔರಾಂಗಬಾದ್: ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಜಯಸಿಂಗ್ ರಾವ್ ಗಾಯಕ್ವಾಡ್ ಪಾಟೀಲ್ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಗಾಯಕವಾಡ್ ಪಾಟೀಲ್, ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧವಿದ್ದರೂ ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ದೂರವಾಣಿ ಮೂಲಕ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ.
ಮಹಾರಾಷ್ಟ್ರ ಬಿಜೆಪಿ ಘಟಕ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಚಂದ್ರಕಾಂತ್ ಪಾಟೀಲ್ ಅವರಿಗೆ ಬರೆದಿರುವ ಪತ್ರದಲ್ಲಿರುವ ಜಯಸಿಂಗ್ ರಾವ್ ಗಾಯಕ್ ವಾಡ್ ಪಾಟೀಲ್ ತಿಳಿಸಿದ್ದಾರೆ. ಈ ಹಿಂದೆ ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿರುವುದಾಗಿ ಅವರು ಹೇಳಿದ್ದಾರೆ.
ಕೇಂದ್ರ ಅಥವಾ ರಾಜ್ಯ ಸರ್ಕಾರದ ಸದಸ್ಯನಾಗಬೇಕಿರಲಿಲ್ಲ. ಪಕ್ಷ ಬಲಪಡಿಸುವ ಕೆಲಸ ಮಾಡಲು ಸಿದ್ಧವಾಗಿದ್ದು, ಅಂತಹ ಹೊಣೆ ವಹಿಸಿಕೊಳ್ಳಲು ದಶಕದಿಂದ ಕೇಳುತ್ತಿದ್ದರೂ ಯಾವುದೇ ಅವಕಾಶವೇ ನೀಡಲಿಲ್ಲ. ರಾಜ್ಯದಲ್ಲಿ ಪಕ್ಷ ಬೆಳೆಸುವ ಪ್ರಯತ್ನ ಮಾಡುವವರು ಬಿಜೆಪಿಗೆ ಬೇಕಾಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ನಿರಾಕರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ