ನವದೆಹಲಿ: ದೆಹಲಿಯ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ.
ಇಂದು ಅವರ ಪಾರ್ಥೀವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದ್ದು ನಂತರ ಪಾಟ್ನಾ ಕ್ಕೆ ತಂದು ಪಕ್ಷದ ಕಚೇರಿಯಲ್ಲಿ ಕೆಲ ಕಾಲ ಇಡಲಾಗುವುದು ಎಂದು ಹೇಳಲಾಗುತ್ತಿದೆ.
ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಅವರ ನಿಧನಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ . ನಡ್ಡಾ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮೃತದೇಹವನ್ನು ಏಮ್ಸ್ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕರೆತಂದು ಗಣ್ಯರ ದರ್ಶನಕ್ಕೆ ಇಡಲಾಗಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತಾ ಶಾ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಇಂದು ಬೆಳಗ್ಗೆ ರಾಮ್ ವಿಲಾಸ್ ಪಾಸ್ವಾನ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದರು.
ಎಲ್ ಜೆಪಿ ನಾಯಕ 74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದರು.
ರಾಮ್ ವಿಲಾಸ್ ಪಾಸ್ವಾನ್ ನಿಧನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನ, ಸಂಸತ್ತು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶೋಕಾಚರಣೆ ಮಾಡಲಾಗುತ್ತಿದೆ. ರಾಷ್ಟ್ರಪತಿ ಭವನ ಮತ್ತು ಸಂಸತ್ತಿನ ಕಟ್ಟಡಗಳಲ್ಲಿ ದೇಶದ ಬಾವುಟವನ್ನು ಇಂದು ಅರ್ಧ ಮಟ್ಟಕ್ಕೆ ಇಳಿಸಲಾಗಿದೆ.
Advertisement