ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರ ಜತೆ ವಿಡಿಯೋ ಸಂವಾದ ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ದಿಗ್ಬಂಧನ ವಿಧಿಸುವಂತೆ ಸೂಚಿಸಿದ್ದಾರೆ.
ದೆಹಲಿಯ ತಬ್ಲಿಘಿ ಜಮಾತ್ ನಲ್ಲಿ ಪಾಲ್ಗೊಂಡಿದ್ದವರ ಜತೆ ಸಂಪರ್ಕಹೊಂದಿರುವ ವಿಚಾರಗಳಲ್ಲಿ ರಾಜ್ಯ ಸರ್ಕಾರಗಳು ಸೂಕ್ಷ್ಮಯಿಂದ ಕಾರ್ಯನಿರ್ವಹಿಸಬೇಕು. ಜತೆಗೆ ಎಲ್ಲರನ್ನೂ ಸಮರೋಪಾದಿಯಲ್ಲಿ ಪತ್ತೆ ಹಚ್ಚಬೇಕು ಎಂದು ಸೂಚಿಸಿದ್ದಾರೆ.
ಜಮಾತ್ ನಲ್ಲಿ ಪಾಲ್ಗೊಂಡಿದ್ದ ವಿದೇಶಿ ಪ್ರಜೆಗಳು ಹಾಗೂ ಕಾರ್ಯಕ್ರಮ ಸಂಘಟಕರು ಒಂದು ವೇಳೆ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹವರನ್ನು ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜೀವ್ ಗೌಬಾ ಅವರು ಸ್ಪಷ್ಟ ಆದೇಶ ನೀಡಿದ್ದಾರೆ.
ಕೊರೋನಾ ವೈಸರ್ ನಿಂದಾಗಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಘೋಷಿಸಲಾಗಿರುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಇನ್ನೊಂದು ವಾರದ ವೇಳೆಗೆ ಜಾರಿಗೆ ತರಬೇಕು. ಇದರಿಂದ ಫಲಾನುಭವಿಗಳಿಗೆ ಹೆಚ್ಚಿನ ರೀತಿಯಲ್ಲಿ ಆರ್ಥಿಕವಾಗಿ ಲಾಭವಾಗಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಈ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.
ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸರಕುಗಳ ಸಾಗಾಟಕ್ಕೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಅಗತ್ಯ ವಸ್ತುಗಳ ಉತ್ಪಾದನೆ ಮತ್ತು ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.
Advertisement