ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ವಿರುದ್ಧ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಸುವವರಿಗೆ ಜೈಲು ಶಿಕ್ಷೆ ವಿಧಿಸುವ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ.
ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಅದರ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸುವ ಸಂಬಂಧ ಕೇಂದ್ರ ಸರ್ಕಾರ ನಿನ್ನೆ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಮಹತ್ವದ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ ಅದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಗಿತ್ತು.
ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಕೊರೋನಾ ಸಾಂಕ್ರಾಮಿಕ ರೋಗದಿಂದ ದೇಶವನ್ನು ರಕ್ಷಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆಸುವುದು ಮತ್ತು ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, ಇದರಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸುವವರಿಗೆ 6 ತಿಂಗಳಿಂದ 7 ವರ್ಷ ಜೈಲು ಶಿಕ್ಷೆ ನೀಡಲು ಅವಕಾಶವಿದೆ ಎಂದು ನಿನ್ನೆ ಸಚಿವ ಸಂಪುಟ ಸಭೆ ಬಳಿಕ ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಹೇಳಿದ್ದರು.
ಈ ಸುಗ್ರೀವಾಜ್ಞೆ ತಕ್ಷಣದಿಂದಲೇ ಜಾರಿಗೆ ಬರಲಿದೆ. 1987ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ತರಲಾಗಿದೆ.
ಈ ಮುಂಚೆ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕೇವಲ 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿತ್ತು. ಈಗ ಕೇಂದ್ರ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು 6 ತಿಂಗಳಿಂದ 7 ವರ್ಷಕ್ಕೆ ವಿಸ್ತರಿಸಿ ಆದೇಶಿಸಿದೆ.
Advertisement