ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ.
ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ ಸಲಹೆ ನೀಡುತ್ತಿದ್ದೇವೆ ಎಂದು ಶ್ರೀವಾಸ್ತವ ತಿಳಿಸಿದ್ದಾರೆ.
ಪಾಕಿಸ್ತಾನದ ಪ್ರತಿನಿಧಿ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ, ವಿಭಜನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ, ಜಮ್ಮು-ಕಾಶ್ಮೀರದ ವಿಚಾರದಲ್ಲಿ ಏಕಪಕ್ಷೀಯ ಹಾಗೂ ಯಥಾಸ್ಥಿತಿಯ ಬದಲಾವಣೆ ಕಾನೂನಿಗೆ ವಿರುದ್ಧ ಹಾಗೂ ಅಮಾನ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದೆ.
Advertisement