ನವದೆಹಲಿ: ಸೋಮವಾರ ಸುಮಾರು ಏಳು ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಅಂತಿಮವಾಗಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೇ ಮುಂದುವರೆಸಲು ನಿರ್ಧರಿಸಲಾಗಿದ್ದು, ಮುಂದಿನ ಆರು ತಿಂಗಳ ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ನಡೆದ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ಹಲವು ನಾಟಕೀಯ ಪ್ರಸಂಗಗಳಿಗೆ ಸಾಕ್ಷಿಯಾಯಿತು. ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆಯಾಗುವುದು ಅಗತ್ಯ ಇದೆ ಎಂದು ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿದಂತೆ 23 ಹಿರಿಯ ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ ವಿಚಾರ ಈ ಸಭೆಯಲ್ಲಿ ಬಹಳಷ್ಟು ಚರ್ಚೆಯಾಗಿದೆ.
ಮುಂದಿನ ಸಿಡಬ್ಲ್ಯೂಸಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಸೋನಿಯಾ ಅವರೇ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ದೊಡ್ಡ ಕುಟುಂಬವಿದ್ದಂತೆ. ತನಗೆ ಯಾರ ವಿರುದ್ಧವೂ ದ್ವೇಷ ಇಲ್ಲ. ಆದರೆ, ಪಕ್ಷದ ವೇದಿಕೆಯಲ್ಲಿ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಿ ಎಂದು ಹಿರಿಯ ನಾಯಕರಿಗೆ ಸಲಹೆ ನೀಡಿದ್ದಾರೆ.
ಇಂದು ಬೆಳಗ್ಗೆ ಸಭೆ ಆರಂಭವಾಗುತ್ತಿದ್ದಂತೆಯೇ ಸೋನಿಯಾ ಗಾಂಧಿಯವರು ತಾವು ಹಂಗಾಮಿ ಅಧ್ಯಕ್ಷೆ ಹುದ್ದೆ ತೊರೆಯಲಿದ್ದು, ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಗುಲಾಂ ನಬಿ ಆಜಾದ್ ಮತ್ತು ಹಲವು ಹಿರಿಯ ನಾಯಕರು ಬರೆದಿರುವ ಪತ್ರದ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಪತ್ರವನ್ನು ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಗೆ ಹಸ್ತಾಂತರಿಸಿರುವ ಸೋನಿಯಾ ಗಾಂಧಿ ಪತ್ರದಲ್ಲಿ ಏನು ಬರೆದಿದ್ದರು, ಅದರಲ್ಲಿನ ವಿಷಯಗಳೇನು ಎಂದು ಇಂದಿನ ವರ್ಚುವಲ್ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಸೋನಿಯಾ ಗಾಂಧಿ ಪ್ರಸ್ತಾಪಿಸಿದರು ಎಂದು ತಿಳಿದುಬಂದಿದೆ.
ಇಂದಿನ ಸಭೆಯಲ್ಲಿ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಗುಲಾಂ ನಬಿ ಆಜಾದ್, ಚಿದಂಬರಂ ಸೇರಿದಂತೆ ಹಲವರು ಭಾಗವಹಿಸಿದ್ದರು. ಹೊಸ ಅಧ್ಯಕ್ಷರ ನೇಮಕವಾಗುವವರೆಗೆ ನೀವೇ ಮುಂದುವರಿಯಬೇಕೆಂದು ಸೋನಿಯಾ ಗಾಂಧಿಯವರನ್ನು ಮನಮೋಹನ್ ಸಿಂಗ್ ಒತ್ತಾಯಿಸಿದರು. ಎ ಕೆ ಆಂಟನಿಯವರು ಕೆಲವು ನಾಯಕರು ಪತ್ರ ಬರೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
Advertisement