ನವದೆಹಲಿ: ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟಿನ ವಿವಾದದಿಂದ ಹೊರಬಂದಿರುವ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸೋರಿ ಜಂಟಿಯಾಗಿ ಬಿಜೆಪಿಯೇತರ ಸಿಎಂಗಳ ವರ್ಚುವಲ್ ಸಭೆ ಕರೆದಿದ್ದು, ಪ್ರತಿಪಕ್ಷಗಳ ಒಗ್ಗೂಡುವಿಕೆಯ ಮುನ್ಸೂಚನೆ ನೀಡಿದ್ದಾರೆ.
ವರ್ಚುವಲ್ ಸಭೆಯಲ್ಲಿ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಆದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಗೈರು ಆಗುವ ಸಾಧ್ಯತೆ ಇದೆ.
ಸಭೆಯಲ್ಲಿ ಜಿಎಸ್ ಟಿ ಸಂಗ್ರಹ, ಕೊರೋನಾದಿಂದ ರಾಜ್ಯಗಳಿಗೆ ಉಂಟಾಗಿರುವ ಆರ್ಥಿಕ ನಷ್ಟ, ಜೆಇಇ ಮತ್ತು ನೀಟ್ ಪರೀಕ್ಷೆಯ ಕುರಿತಾಗಿ ಭುಗಿಲೆದ್ದಿರುವ ವಿವಾದದ ಕುರಿತ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಆದರೆ ಆಡಳಿತಾರೂಢ ಬಿಜೆಪಿ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಈ ಸಭೆ ಕರೆಯಲಾಗಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.
ಮಮತಾ ಬ್ಯಾನರ್ಜಿ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಕಾಂಗ್ರೆಸ್ ಕೂಡ ಕೊರೊನಾ ಕಾಲದಲ್ಲಿ ಪರೀಕ್ಷೆಗಳನ್ನು ನಡೆಸುವುದು ಬೇಡ ಎಂದು ಹೇಳಿದೆ.
ಪರೀಕ್ಷೆಯ ನೆಪದಲ್ಲಿ ವಿಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ವಿರುದ್ಧ ಸಾಂಘಿಕ ಹೋರಾಟ ನಡೆಸುವ ಉದ್ದೇಶವನ್ನು ಹೊಂದಲಾಗಿದೆ ಎನ್ನಲಾಗಿದೆ.
ಖುದ್ದು ಸೋನಿಯಾ ಗಾಂಧಿ ಅವರೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಕರೆ ಮಾಡಿ ವರ್ಚುವಲ್ ಸಭೆಗೆ ಆಹ್ವಾನಿಸಿದ್ದಾರೆ.
ಆದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಸಭೆಗೆ ಗೈರು ಹಾಜರಾಗಲಿದ್ದಾರೆ ಎನ್ನಲಾಗಿದ್ದು, ಕೇರಳದಲ್ಲಿ ಕಾಂಗ್ರೆಸ್ನಿಂದ ತೀವ್ರ ವಿರೋಧ ಎದುರಿಸುತ್ತಿರುವ ಪಿಣರಾಯಿ ವಿಜಯನ್ ಕೂಡ ಸಭೆಯಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.
Advertisement