ನವದೆಹಲಿ: ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.
ಇಂದು ದೇಶಾದ್ಯಂತ ಪ್ರತಿಭಟನೆಗೆ ಚಾಲನೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜನರು ಪರೀಕ್ಷೆ ನಡೆಸುವುದನ್ನು ವಿರೋಧಿಸಬೇಕೆಂದು ಒತ್ತಾಯಿಸಿದ್ದಾರೆ.
ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಮತ್ತು ಪ್ರವಾಹ ಸ್ಥಿತಿಯಂತಹ ಸಂಕಷ್ಟವಿದ್ದು ಈ ಸಂದರ್ಭದಲ್ಲಿ ಸರ್ಕಾರ ಪರೀಕ್ಷೆ ವಿದ್ಯಾರ್ಥಿಗಳ ಜೀವನ ಜತೆ ಚಲ್ಲಾಟವಾಡಬಾರದು. ವಿದ್ಯಾರ್ಥಿಗಳ ಜೊತೆ ನೀವು ಧ್ವನಿಯಾಗಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯ ಬಗ್ಗೆ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಮಾತನ್ನು ಕೇಳಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಲವು ಕಾಂಗ್ರೆಸ್ ನಾಯಕರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.ಹಲವು ವಿದ್ಯಾರ್ಥಿ ಸಂಘಟನೆಗಳು ಕೂಡ ಪ್ರತಿಭಟನೆಯಲ್ಲಿ ತೊಡಗಿವೆ.
ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದ್ದು ನಿಗದಿಯಂತೆ ನೀಟ್ ಪರೀಕ್ಷೆ ಸೆಪ್ಟೆಂಬರ್ 13ರಂದು, ಜೆಇಇ ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1ರಿಂದ 6ರವರೆಗೆ ನಡೆಯಲಿದೆ.
Advertisement