ನವದೆಹಲಿ: ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರು ಸೋಮವಾರ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ರೈತರನ್ನು ರಾಷ್ಟ್ರದ್ರೋಹಿಗಳು ಎಂದು ಕರೆದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ಸಾಕಷ್ಟು ನಿವೃತ್ತ ಸೇನಾ ಯೋಧರು, ಕ್ರೀಡಾಪಟುಗಳು, ವೈದ್ಯರು, ವಕೀಲರು, ವ್ಯಾಪಾರಿಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಿದ್ದಾರೆ. ಅವರೆಲ್ಲರೂ ರಾಷ್ಟ್ರದ್ರೋಹಿಗಳೇ ಎಂದು ಪ್ರಶ್ನಿಸಿದ್ದಾರೆ.
ಇದು ಕೇವಲ ಕೆಲವೆ ರೈತರ ಸಣ್ಣ ಹೋರಾಟ ಎಂದು ಬಿಜೆಪಿ ಭಾವಿಸಿದ್ದರೆ ಅದು ತಪ್ಪು. ದೇಶದ ಪ್ರತಿಯೊಬ್ಬರೂ ಈ ಕಾನೂನುಗಳ ಪರಿಣಾಮವನ್ನು ಅರಿತಿದ್ದಾರೆ ಮತ್ತು ಇವುಗಳನ್ನು ರದ್ದುಗೊಳಿಸಬೇಕು ಎಂದು ಬಯಸುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ತಮ್ಮ ಅಹಂ ಅನ್ನು ಕೈಬಿಟ್ಟು, ಈ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ದೆಹಲಿ ಸಿಎಂ ಒತ್ತಾಯಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಆಕ್ರೋಶಗೊಂಡು ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದು, ರೈತರ ನಿರ್ಧಾರವನ್ನು ಬೆಂಬಲ ನಾನು ಸಹ ಸೋಮವಾರ ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರು ಸಹ ಇದಕ್ಕೆ ಸಾಥ್ ನೀಡಬೇಕು ಎಂದು ಕೇಜ್ರಿವಾಲ್ ಅವರು ಹೇಳಿದ್ದಾರೆ.
Advertisement