ಮುಂಬೈ: ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಪಕ್ಷದ ನಾಯಕ ಸಂಜಯ್ ರಾವತ್ ಪತ್ನಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಪಿಎಂಸಿ ಬ್ಯಾಂಕ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಜಯ್ ರಾವತ್ ಪತ್ನಿ ವರ್ಷಾಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ ಮಾಡಿದೆ ಎಂದು ವರದಿಗಳು ತಿಳಿಸಿವೆ.
ವರ್ಷಾ ರಾವತ್ಗೆ ಮುಂಬೈನಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ರೂ. 4,335 ಕೋಟಿಯಷ್ಟು ಹಣವನ್ನು ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಇ.ಡಿ. ಪ್ರಕರಣ ಕೈಗೆತ್ತಿಕೊಂಡಿತ್ತು.
ಸಂಜಯ್ ರಾವತ್ ಅವರ ಆಪ್ತರಾಗಿರುವ ಪ್ರವೀಣ್ ರಾವತ್ ಪತ್ನಿ ಮಾಧುರಿ ಮತ್ತು ರಾವತ್ ನಡುವೆ 55 ಲಕ್ಷ ರೂಪಾಯಿ ವಹಿವಾಟು ನಡೆಸಿರುವ ಪ್ರಕರಣದ ಕುರಿತು ಇಡಿ ತನಿಖೆ ನಡೆಸುತ್ತಿದೆ. ಆಸ್ತಿ ಅಭಿವೃದ್ಧಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಪ್ರವೀಣ್ ರಾವತ್ನನ್ನು ಬಂಧಿಸಲಾಗಿತ್ತು. ಅವರಿಗೆ ಪ್ರಕರಣದಲ್ಲಿ ಜಾಮೀನು ಲಭಿಸಿತ್ತು. 2016ರಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಕ್ಕಾಗಿ ಸಂಜಯ್ ರವತ್ ಸಲ್ಲಿಸಿದ ಅಫಿಡವಿಟ್ನಲ್ಲಿ ರೂ.55 ಲಕ್ಷ ಸಾಲದ ಬಗ್ಗೆ ಉಲ್ಲೇಖಿಸಲಾಗಿತ್ತು.
ಇ.ಡಿ ನೋಟಿಸ್ ಕುರಿತು ಪ್ರತಿಕ್ರಿಯೆ ನೀಡಿರುವ ವರ್ಷಾ ರಾವತ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೂ ಯಾವುದೇ ಭಯವಿಲ್ಲ ಎಂದು ಹೇಳಿದ್ದಾರೆ.
Advertisement