ನವದೆಹಲಿ: ದೆಹಲಿಯಲ್ಲಿ ಸಿಎಎ ಹಿಂಸಾಚಾರ ತಾರಕಕ್ಕೇರಿರುವಂತೆಯೇ ಇತ್ತ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರ ಶವ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ.
ಹಿಂಸಾಚಾರ ಪೀಡಿತ ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಯ ಶವ ಪತ್ತೆಯಾಗಿದ್ದು, ಮೃತ ಅಧಿಕಾರಿಯನ್ನು 24 ವರ್ಷದ ಅಂಕಿತ್ ಶರ್ಮಾ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ಅಂಕಿತ್ ಶರ್ಮಾ 2017ನೇ ಬ್ಯಾಚ್ ನ ಅಧಿಕಾರಿಯಾಗಿದ್ದು, ಟ್ರೈನೀ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಂತೆಯೇ ಇದೇ ಚಾಂದ್ ಬಾಗ್ ನಲ್ಲಿ ಅಂಕಿತ್ ಶರ್ಮಾ ನಿವಾಸವಿದ್ದು, ಅಲ್ಲಿಯೇ ಮೋರಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಪ್ರಸ್ತುತ ಮೃತ ಅಂಕಿತ್ ಶರ್ಮಾ ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗುರುತೇಜ್ ಬಹದ್ದೂರ್ ಆಸ್ಪತ್ರೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನು ಭಾನುವಾರದಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಈ ವರೆಗೂ ಕನಿಷ್ಠ 22 ಮಂದಿ ಬಲಿಯಾಗಿದ್ದು, 190ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ ನೂರಾರು ಕೋಟಿ ರೂ ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ವಾಹನಗಳು, ಮನೆ, ಅಂಗಡಿಗಳಿಗೆ ಉದ್ರಿಕ್ತರು ಬೆಂಕಿ ಹಚ್ಚಿ ನಾಶ ಮಾಡಿದ್ದಾರೆ.
Advertisement