ನವದೆಹಲಿ: ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದು ಬಿಜೆಪಿಯೇತರ ಹಲವು ರಾಜ್ಯಗಳು ಘೋಷಿಸಿರುವ ಹಿನ್ನೆಲೆಯಲ್ಲಿ ಆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಟಾಂಗ್ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಪೌರತ್ವ ಕಾಯ್ದೆ ಅಡಿ ಆನ್ ಲೈನ್ ಮೂಲಕವೇ ಪೌರತ್ವ ನೀಡಲು ಮುಂದಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.
ಈಗ ಇರುವ ನಿಯಮಗಳ ಪ್ರಕಾರ, ಪೌರತ್ವ ಪಡೆಯಲು ಬಯಸುವವರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಆನಂತರ ಅದು ಮುಂದಿನ ಹಂತಕ್ಕೆ ಹೋಗಲಿದೆ. ಪೌರತ್ವ ಕಾಯ್ದೆ ಅಡಿ ಅದೇ ನಿಯಮ ಪಾಲನೆ ಮಾಡಲು ರಾಜ್ಯ ಸರ್ಕಾರಗಳ ಅಸಹಾಕರ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರ್ಜಿ ಸ್ವೀಕಾರ, ದಾಖಲೆ ಪರಿಶೀಲನೆ, ಪೌರತ್ವ ಮಂಜೂರು ಪ್ರಕ್ರಿಯೆಯನ್ನು ಆನ್'ಲೈನ್ ಗೊಳಿಸುವ ಆಲೋಚನೆ ಇದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದು ವೇಳೆ ಹೀಗಾದರೆ, ಪೌರತ್ವ ನೀಡುವ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಹಂತದಲ್ಲೂ ಮಧ್ಯಪ್ರವೇಶ ಮಾಡಲು ಆಗುವುದಿಲ್ಲ ಎಂಬ ಲೆಕ್ಕಾಚಾರವನ್ನು ಕೇಂದ್ರ ಸರ್ಕಾರ ಹೊಂದಿದೆ. ಇದೇ ವೇಳೆ, ಸಂವಿಧಾನದ 7ನೇ ಪರಿಚ್ಛೇದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರೂಪಿಸಲಾಗಿದೆ.
ಪೌರತ್ವ ವಿಚಾರ ಸಂಪೂರ್ಣವಾಗಿ ಕೇಂದ್ರ ಸರ್ಕಾರ ಪರಿಧಿಗೆ ಬರುತ್ತದೆ. ಹೀಗಾಗಿ ರಾಜ್ಯ ಸರ್ಕಾರಗಳಿಗೆ ಸಿಎಎ ತಿರಸ್ಕರಿಸುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಇರುವ ಪ್ರಕ್ರಿಯೆ ಪ್ರಕಾರ ಪೌರತ್ವ ಬಯಸುವವರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಬಳಿಕ ಜಿಲ್ಲಾಧಿಕಾರಿಗಳು ಅರ್ಜಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
Advertisement