ನವದೆಹಲಿ: ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು)ದ ಕ್ಯಾಂಪಸ್ಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅಲ್ಲಿನ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೆಎನ್ ಯು ಹಿಂಸಾಚಾರ ಘಟನೆಯ ನೈತಿಕ ಜವಾಬ್ದಾರಿ ಹೊತ್ತು ಜೆಎನ್ ಯು ಸಾಬರಮತಿ ಹಾಸ್ಟೆಲ್ ವಾರ್ಡನ್ ಆ ಮೀನಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಲಿಖಿತ ಪತ್ರಬರೆದಿರುವ ಮೀನಾ ಅವರು, ಹಿಂಸಾಚಾರ ತಡೆಯಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದೆವು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಇನ್ನು ದೆಹಲಿಯಲ್ಲಿನ ಜೆಎನ್ ಯು ಹಿಂಸಾಚಾರ ಪ್ರಕರಣವನ್ನು ದೆಹಲಿ ಅಪರಾಧ ದಳ ತನಿಖೆ ಮಾಡುತ್ತಿದ್ದು, ಈಗಾಗಲೇ ಹಲವು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
Advertisement