ಲಖನೌ:ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ವಿರೋಧಕ್ಕೆ ಕಾರಣವಾಗಿರುವ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿರುವ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಪೌರತ್ವ ನೋಂದಣಿ- (ಎನ್ ಆರ್ ಸಿ)ಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರದಲ್ಲಿ ಸಿಎಎ ವಿರುದ್ಧವಾಗಿ ಪ್ರತಿಭಟನೆ ನಡೆಸಿ ಬಂಧಿತರಾಗಿ ನಂತರ ಜಾಮೀನಿನ ಮೇರೆಗೆ ಬಿಡುಗಡೆಯಾಗಿರುವ ಹಲವು ಕಾರ್ಯಕರ್ತರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ದೇಶದ ಸಂವಿಧಾನಕ್ಕೆ ವಿರುದ್ಧವಾದ ಯಾವುದೇ ಕಾನೂನಿನ ಅನುಷ್ಠಾನದ ವಿರುದ್ಧ ಅಸಂಖ್ಯಾತ ಜನರು ಬೀದಿಗಿಳಿಯಲಿದ್ದಾರೆ. ರೈತರು, ಕೆಲಸಗಾರರು, ಯುವಕರು ಮತ್ತು ವಿದ್ಯಾರ್ಥಿಗಳು ಅವರ ಹಕ್ಕುಗಳಿಗಾಗಿ ಹೋರಾಟ ನಡೆಸಲಿದ್ದಾರೆ ಎಂದರು.
ಸಿಎಎ ವಿರುದ್ಧದ ಪ್ರತಿಭಟನೆಯಿಂದಾಗಿ ಜೈಲಿಗೆ ಹಾಕುವ ಹಾಗೂ ಗಂಭೀರ ಪ್ರಕರಣಗಳಲ್ಲಿ ಹಲ್ಲೆಗೊಳಗಾಗುವ ಕಾರ್ಯಕರ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಕಾನೂನು ಘಟಕವೊಂದನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.
ಸಿಎಎ ವಿರುದ್ಧದ ಪ್ರತಿಭಟನೆಯಿಂದಾಗಿ 15 ದಿನಗಳ ಕಾಲ ಜೈಲಿನಲ್ಲಿದ್ದ ಹೋರಾಟಗಾರರಾದ ಏಕ್ತಾ ಶೇಖರ್ ಸಿಂಗ್ ಹಾಗೂ ಅವರ ಪತಿ ರವಿ ಶೇಕರ್ ಅವರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ, 18 ತಿಂಗಳ ಮಗುವನ್ನು ದೂರ ಮಾಡಿ ಈ ದಂಪತಿಯನ್ನು ಜೈಲಿಗೆ ಹಾಕಲಾಗಿತ್ತು. ಆದರೆ, ದೇಶಕ್ಕಾಗಿ ಅವರು ಹೋರಾಟ ನಡೆಸಿದ್ದರಿಂದ ನನಗೆ ಸಂತೋಷವಾಗಿದೆ ಎಂದರು.
ಕಾಶಿ ವಿಶ್ವನಾಥ್ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ ಜೈಪುರಕ್ಕೆ ಪ್ರಿಯಾಂಕಾ ಗಾಂಧಿ ತೆರಳಿದರು
Advertisement