ಪೌರತ್ವ ಕಾಯ್ದೆಯಿಂದ ಸಂವಿಧಾನ, ಜಾತ್ಯಾತೀತತೆ ಉಲ್ಲಂಘನೆಯಾಗಿದೆ: 'ಸುಪ್ರೀಂ' ಮೆಟ್ಟಿಲೇರಿದ ಕೇರಳ ಸರ್ಕಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಂವಿಧಾನ, ಜಾತ್ಯಾತೀತತೆ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಕೇರಳ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. 
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್

ತಿರುವನಂತಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಂವಿಧಾನ, ಜಾತ್ಯಾತೀತತೆ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಕೇರಳ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. 

ಪೌರತ್ವ ಕಾಯ್ದೆ ಜಾರಿ ಸಂವಿಧಾನದ ವಿಧಿ 14, 21 ಮತ್ತು 25ನ್ನು ಉಲ್ಲಂಘನೆ ಮಾಡಿದಂತಾಗಿದೆ. ಅಲ್ಲದೆ, ಭಾರತ ಸಂವಿಧಾನದ ಜಾತ್ಯಾತೀತತೆಯ ಮೂಲತತ್ವಗಳ ವಿರುದ್ಧವಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ. 

ಪೌರತ್ವ ಕಾಯ್ದೆ ವಿರುದ್ಧ ನಿನ್ನೆಯಷ್ಟೇ ರ್ಯಾಲಿ ನಡೆಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇರಳ ರಾಜ್ಯದಲ್ಲಿ ಜಾರಿಯಾಗಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ.

ಪೌರತ್ವ ಮಸೂದೆ ಎಂದರೇನು?
ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಘಾನಿಸ್ತಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿದ ಕಾರಣಕ್ಕೆ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರು. ಅಂದರೆ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿ ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡಲು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿದೆ. ಜೊತೆಗೆ ಹೀಗೆ ಪೌರತ್ವ ಪಡೆಯಲು, ವಲಸಿಗರು ಭಾರತದಲ್ಲಿ ಕನಿಷ್ಠ 11 ವರ್ಷ ನೆಲೆಸಿರಬೇಕು ಎಂಬ ನಿಯಮವನ್ನು ಸರ್ಕಾರ 6 ವರ್ಷಕ್ಕೆ ಇಳಿಸಿದೆ. ಆದರೆ, ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಈಶಾನ್ಯ ರಾಜ್ಯಗಳ ಹಲವು ಸಂಘಟನೆಗಳು ವಿರೋಧ ಹೊಂದಿವೆ. 

ಎನ್ಆರ್'ಸಿ ಎಂದರೇನು?
ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮಸೂದೆಯು, ದೇಶದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಉದ್ದೇಶ ಹೊಂದಿದೆ. ಮೊದಲ ಹಂತದಲ್ಲಿ ಸುಪ್ರೀಂಕೋರ್ಟ್ ಸೂಚನೆ ಅನ್ವಯ ಇದನ್ನು ಅಸ್ಸಾಂನಲ್ಲಿ ಜಾರಿಗೆ ತರಲಾಗಿತ್ತು. ಅಲ್ಲಿ ಇತ್ತೀಚೆಗೆ ಪ್ರಕಟಿಸಲಾದ ಅಂತಿಮ ವರದಿ ಅನ್ವಯ, 30 ಲಕ್ಷ ಜನರನ್ನು ಅಕ್ರಮ ನಿವಾಸಿಗಳು ಎಂದು ಘೋಷಿಸಲಾಗಿದೆ. ಆದರೆ, ಇವರಿಗೆಲ್ಲಾ ವಿದೇಶಿಗರ ಮೇಲ್ಮನವಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಕಲ್ಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com