ತಿರುವನಂತಪುರಂ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ನವೀಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕ್ರಿಯೆಗಳಿಗೆ ಸಹಕರಿಸುವುದಿಲ್ಲ ಎಂದು ಕೇಂದ್ರಕ್ಕೆ ಮಾಹಿತಿ ನೀಡಲು ಕೇರಳದ ಎಡ ಸರ್ಕಾರ ಇಂದು ನಿರ್ಧರಿಸಿದೆ.ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎನ್ ಪಿಆರ್ ನವೀಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ಸಹಕರಿಸಲು ಅಸಾಧ್ಯ ಎಂಬುದನ್ನು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಜನಗಣತಿ ಆಯುಕ್ತರು ಹಾಗೂ ರಿಜಿಸ್ಟ್ರಾರ್ ಜನರಲ್ ಅವರಿಗೆ ಮಾಹಿತಿ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.
ಎನ್ ಪಿಆರ್ ಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯ ಒಂದು ದಿನದ ಬಳಿಕ ಕೇರಳ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ
ಮತ್ತೊಂದೆಡೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ವರದಿ ಕೇಳಿದ ಬೆನ್ನಲ್ಲೇ ಯಾವುದೇ ರೀತಿಯ ಮಾಹಿತಿ ನೀಡದೆ ಕೇರಳದ ಮುಖ್ಯ ಕಾರ್ಯದರ್ಶಿ ಟಾಮ್ ಜೊಸ್ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ. ಸುಮಾರು 20 ನಿಮಿಷಗಳ ಕಾಲ ಈ ಸಭೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ಟಾಮ್ ಜೊಸ್ ನಿರಾಕರಿಸಿದ್ದಾರೆ.
ಕೇರಳದ ಮುಖ್ಯ ಕಾರ್ಯದರ್ಶಿಯಿಂದ ರಾಜ್ಯಪಾಲರು ವರದಿಯನ್ನು ಬಯಸಿದ್ದರು.ಇದು ವೈಯಕ್ತಿಕ ಹೋರಾಟವಲ್ಲ, ಸಂವಿಧಾನದ ಕಡೆಗೆ ಮಾತ್ರ ಗಮನ ನೀಡಿ ಕಾನೂನನ್ನು ಎತ್ತಿ ಹಿಡಿಯುತ್ತೇನೆ. ಕಾನೂನಿನ ಪ್ರಕಾರ ಸರ್ಕಾರ ವ್ಯವಹರಿಸಬೇಕು ಎಂದು ಅವರು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸದನದಲ್ಲಿ ನಿರ್ಣಯ ಅಂಗೀಕರಿಸಿದ ನಂತರ ಜನವರಿ 13 ರಂದು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದರಿಂದ ಅಸಮಾಧಾನಗೊಂಡಿದ್ದ ರಾಜ್ಯಪಾಲ ಖಾನ್, ಸೌಜನ್ಯಕ್ಕಾದರೂ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಮುನ್ನ ಸರ್ಕಾರ ತನ್ನಗೆ ತಿಳಿಸಬೇಕಾಗಿತ್ತು ಎಂದು ಹೇಳಿದ್ದರು.
Advertisement