ನವದೆಹಲಿ: ಫೆಬ್ರವರಿ 8ರಂದು ನಡೆಯಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ಶುಕ್ರವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತದಾರರನ್ನು ಸೆಳೆಯಲು ಹಲವು ಭರವಸೆಗಳನ್ನು ನೀಡಿದೆ.
ಬಿಜೆಪಿಯ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ದೆಹಲಿ ಜನತೆಯನ್ನು ಅತಿಹೆಚ್ಚು ಕಾಡುವ ವಾಯು ಮಾಲಿನ್ಯ ಮತ್ತು ಜಲ ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳಲಾಗುವುದು ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
ಇಂದು ಪಕ್ಷದ ಕಚೇರಿಯಲ್ಲಿ ಸಂಕಲ್ಪ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಹಿರಿಯ ನಾಯಕ ನಿತಿನ್ ಗಡ್ಕರಿ, ಹರ್ಷ ವರ್ಧನ್, ಪ್ರಕಾಶ್ ಜಾವ್ಡೇಕರ್ ಮಹಿಳಾ ಸುರಕ್ಷತೆ, ಭ್ರಷ್ಟಚಾರ ಮುಕ್ತ, ಪಾರದರ್ಶಕ ವ್ಯವಸ್ಥೆ ಕಲ್ಪಿಸುವ ಕುರಿತು ಆಶ್ವಾಸನೆ ನೀಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡ್ಕರಿ, ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮತ್ತು ಜಲ ಮಾಲಿನ್ಯ ಸಮಸ್ಯೆ ಅತಿ ದೊಡ್ಡ ಸವಾಲಾಗಿದೆ. ಈ ಎರಡು ಸಮಸ್ಯೆಗಳಿಂದ ದೆಹಲಿ ಜನತೆಗೆ ಮುಕ್ತಿ ನೀಡಲು ನಾವು ನಿರ್ಧರಿಸಿದ್ದೇವೆ ಎಂದರು.
Advertisement