ಜೈಪುರ್: ರಾಜಸ್ಥಾನ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಸಂದರ್ಭ ಸೃಷ್ಟಿಯಾದರೆ, ಬಿಎಸ್ಪಿ ಶಾಸಕರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಬೇಕು ಎಂದು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ತನ್ನ ಆರು ಶಾಸಕರಿಗೆ ವಿಪ್ ಜಾರಿ ಮಾಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, ‘ಎಲ್ಲಾ ಆರು ಶಾಸಕರಿಗೆ ಪ್ರತ್ಯೇಕವಾಗಿ ನೋಟಿಸ್ ನೀಡಲಾಗಿದೆ. ‘ಬಿಎಸ್ಪಿ ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷ. ಹಾಗಾಗಿ ಸಂವಿಧಾನದ 10ನೇ ಪರಿಚ್ಛೇದದ ನಾಲ್ಕನೇ ಖಂಡಿಕೆಯಲ್ಲಿ ಉಲ್ಲೇಖಸಿರುವಂತೆ ರಾಜ್ಯಮಟ್ಟದಲ್ಲಿ ಯಾವುದೇ ವಿಲೀನ ಪ್ರಕ್ರಿಯೆ ಸಾಧ್ಯವಿಲ್ಲ. ರಾಷ್ಟ್ರದ ಎಲ್ಲ ಕಡೆ ವಿಲೀನವಾಗದೇ, ಈ ಆರು ಜನ ಶಾಸಕರು ಬೇರೆ ಪಕ್ಷಗಳೊಂದಿಗೆ ವಿಲೀನಗೊಳ್ಳಲು ಸಾಧ್ಯವಿಲ್ಲ,’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಈ ಆರು ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದರೆ, ಅವರು ವಿಧಾನಸಭೆಯಿಂದ ಅನರ್ಹರಾಗಲು ಹೊಣೆಗಾರರಾಗಿರುತ್ತಾರೆ ಎಂದು ಮಿಶ್ರಾ ಹೇಳಿದ್ದಾರೆ. ಇದಿಷ್ಟೇ ಅಲ್ಲದೆ, ರಾಜಸ್ಥಾನದಲ್ಲಿ ವಿಚಾರಣೆ ಹಂತದಲ್ಲಿರುವ ಶಾಸಕರ ಅನರ್ಹತೆ ಪ್ರಕರಣದಲ್ಲಿ ಬಿಎಸ್ಪಿಯು ಮಧ್ಯಪ್ರವೇಶ ಮಾಡುವುದಾಗಿ ತಿಳಿಸಿದೆ. ಇಲ್ಲವೇ, ಪ್ರತ್ಯೇಕ ಅರ್ಜಿಯನ್ನು ಸಲ್ಲಿಸುವುದಾಗಿಯೂ ಬಿಎಸ್ಪಿ ಹೇಳಿದೆ.
ಸಂದೀಪ್ ಯಾದವ್, ವಾಜಿಬ್ ಅಲಿ, ದೀಪ್ಚಂದ್ ಖೇರಿಯಾ, ಲಖನ್ ಮೀನಾ, ಜೋಗೇಂದ್ರ ಅವನಾ ಮತ್ತು ರಾಜೇಂದ್ರ ಗುಧಾ ಎಂಬ ಆರು ಮಂದಿ ಶಾಸಕರಿಗೆ ಸದ್ಯ ಬಿಎಸ್ಪಿ ವಿಪ್ ಜಾರಿ ಮಾಡಿದೆ. 2018ರಲ್ಲಿ ನಡೆದಿದ್ದ ರಾಜಸ್ಥಾನ ವಿಧಾನಸಭೆ ಚುನಾಣೆಯಲ್ಲಿ ಇವರೆಲ್ಲರೂ ಬಿಎಸ್ಪಿಯಿಂದ ಆಯ್ಕೆಯಾಗಿದ್ದರು.
Advertisement