ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣ: ಡಿಎಂಕೆ ಮಾಜಿ ಶಾಸಕನನ್ನು ಖುಲಾಸೆಗೊಳಿಸಿದ ಮದ್ರಾಸ್ ಹೈಕೋರ್ಟ್
2012ರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದಿಂದ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಡಿಎಂಕೆ ಮಾಜಿ ಶಾಸಕ ಎಂ. ರಾಜಕುಮಾರ್ ಮತ್ತು ಅವರ ಆಪ್ತ ಕೆ ಜೈಶಂಕರ್ ಅವರನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ.
Published: 31st July 2020 11:54 PM | Last Updated: 31st July 2020 11:54 PM | A+A A-

ಮದ್ರಾಸ್ ಹೈಕೋರ್ಟ್
ಚೆನ್ನೈ: 2012ರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದಿಂದ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಡಿಎಂಕೆ ಮಾಜಿ ಶಾಸಕ ಎಂ. ರಾಜಕುಮಾರ್ ಮತ್ತು ಅವರ ಆಪ್ತ ಕೆ ಜೈಶಂಕರ್ ಅವರನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ.
ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕುಮಾರ್ ಮತ್ತು ಅವರ ಆಪ್ತನಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 2018ರಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.
ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಮಾಜಿ ಶಾಸಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಆರೋಪಿಗಳಿಬ್ಬರನ್ನು ಖುಲಾಸೆಗೊಳಿಸಿದ್ದು, ಇತರೆ ಪ್ರಕರಣಗಳಲ್ಲಿ ಅವರ ಕಸ್ಟಡಿಯ ಅಗತ್ಯವಿಲ್ಲದಿದ್ದರೆ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ.
2012ರಲ್ಲಿ ಕೇರಳ ಮೂಲದ ಬಾಲಕಿ ರಾಜಕುಮಾರ್ ಮನೆಯಲ್ಲಿ ಕೆಲಸಕ್ಕೆ ಸೇರಿದ್ದಳು. ಕೆಲ ದಿನಗಳ ನಂತರ ಬಾಲಕಿ ತೀವ್ರ ಅಸ್ವಸ್ಥಗೊಂಡ ಕಾರಣ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಳು. ಅಂತ್ಯಸಂಸ್ಕಾರದ ವೇಳೆ ಬಾಲಕಿ ಮೃತದೇಹದಲ್ಲಿ ಗಾಯದ ಗುರುತು ಕಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಮರಣತ್ತೋರ ಪರೀಕ್ಷೆ ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ರಾಜಕುಮಾರ್ ವಿರುದ್ಧ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದಾಖಲಿಸಲಾಗಿತ್ತು.