ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಅರ್ನಬ್ ಗೋಸ್ವಾಮಿ

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಅರ್ನಾಬ್ ಗೋಸ್ವಾಮಿ
ಅರ್ನಾಬ್ ಗೋಸ್ವಾಮಿ

ಮುಂಬೈ: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಮುಂಬೈನ ಎನ್ ಎಂ ಜೋಷಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ 2ಗಂಟೆಗೆ ಹಾಜರಾದರು. ಇದಕ್ಕೂ ಮೊದಲು ರಿಪಬ್ಲಿಕ್ ಟಿವಿ ಮುಖ್ಯಸ್ಥ ಎಸ್ ಸುಂದರಂ ಅವರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದರು.  

ಇನ್ನು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಗಳನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ರಿಯಾಜ್ ಚಾಗ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠ ಬುಧವಾರ ಪೊಲೀಸರ ಮುಂದೆ ಹಾಜರಾಗುವಂತೆ ಆರೋಪಿಗೆ ಸೂಚಿಸಿತ್ತು.

ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಅರ್ನಬ್ ಗೋಸ್ವಾಮಿ ವಿರುದ್ಧ ಮುಂಬೈ ಹಾಗೂ ನಾಗ್ಪುರದಲ್ಲಿ ಎರಡು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಗೆ ಸೂಚಿಸಿದ್ದರು. ಆದರೆ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕೋರಿ ಗೋಸ್ವಾಮಿ ಪರ ವಕೀಲ ಹರೀಶ್ ಸಾಳ್ವೆ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ವಿಸ್ತರಿಸಿದ ನಂತರ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಾಂದ್ರಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ಈ ಘಟನೆಗೂ ಬಾಂದ್ರಾದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಅರ್ನಬ್ ಅವರು ಮಸೀದಿಯ ಚಿತ್ರ ತೋರಿಸಿ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ರಝಾ ಎಜುಕೇಷನ್ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಇರ್ಫಾನ್ ಅಬೂಬಕರ್ ಶೈಖ್ ಎಂಬುವವರು ಪೊಲೀಸರು ದೂರೂ ನೀಡಿದ್ದರು.

ಶೈಕ್ ದೂರಿನ ಆಧಾರದ ಮೇಲೆ ಪೊಲೀಸರು ಅರ್ಬನ್ ಗೋಸ್ವಾಮಿ ಹಾಗೂ ಇತರೆ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 500, 511 ಮತ್ತು 120 ಬಿ ಅಡಿ ಕೇಸ್ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com