ಸೀತಾಮರಿ: ಬಿಹಾರದ ಸೀತಾಮರಿ ಜಿಲ್ಲೆಯ ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೀಮಾ ಸುರಕ್ಷಾ ಬಲ(ಎಸ್ಎಸ್ ಬಿ) ಖಚಿತಪಡಿಸಿದೆ.
ಈ ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾವು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ನಾವು ಎಲ್ಲವನ್ನೂ ನಿರ್ವಹಿಸುತ್ತಿದ್ದೇವೆ ಎಂದು ಎಸ್ಎಸ್ ಬಿ ಮಹಾ ನಿರ್ದೇಶಕ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.
ಲಾಲ್ ಬಂಡಿ ಪ್ರದೇಶದ ಸೋನಬರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯ ಜಾನಕಿ ನಗರ ಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೇಪಾಳ ಸೇನೆ ಭಾರತೀಯ ನಾಗರಿಕರನ್ನು ವಶಕ್ಕೆ ಪಡೆದಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಸಂಜಯ್ ಕುಮಾರ್ ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು 25 ವರ್ಷದ ದಿಕೇಶ್ ಕುಮಾರ್ ಎಂದು ಹಾಗೂ ಗಾಯಗೊಂಡವರನ್ನು ಉಮೇಶ್ ರಾಮ್ ಮತ್ತು ಉದಯ್ ಠಾಕೂರ್ ಎಂದು ಗುರುತಿಸಲಾಗಿದೆ.
Advertisement