ಬೆಂಗಳೂರು: ಸುಪ್ರೀಂ ಕೋರ್ಟ್ ಗೂ ಕೊರೋನಾ ವೈರಸ್ ಬಿಸಿ ತಟ್ಟಿದ್ದು, ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು ಸೋಮವಾರದಿಂದ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸುವುದಾಗಿ ಶುಕ್ರವಾರ ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಕೊರೋನಾ ವೈರಸ್ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಆತಂಕಗೊಂಡಿರುವ ಸುಪ್ರೀಂ ಕೋರ್ಟ್, ಮಾರ್ಚ್ 16ರಿಂದ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸಲು ನಿರ್ಧರಿಸಿದೆ. ಅಲ್ಲದೆ ಕೋರ್ಟ್ ಗೆ ಬರುವವರಿಗೂ ಹಲವು ನಿರ್ಬಂಧಗಳನ್ನು ವಿಧಿಸಿದೆ.
ಇಂದು ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 84ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಪಡೆದವರಲ್ಲಿ ಭಾರತದಲ್ಲಿ ನಾಲ್ವರು ರೋಗಿಗಳು ಗುಣಮುಖರಾಗುತ್ತಿದ್ದು, ದುಬೈಯಿಂದ ಬಂದ ಕಲಬುರಗಿಯ ವೃದ್ಧ ಮೃತಪಟ್ಟಿದ್ದಾರೆ.
ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಬಿಹಾರ, ಉತ್ತರ ಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮಾಲ್, ಚಿತ್ರಮಂದಿರ ಬಂದ್ ಮಾಡಿದ್ದು, ಎಲ್ಲಾ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಅಲ್ಲದೆ ಶಾಲಾ ಕಾಲೇಜ್ ಗಳಿಗೂ ರಜೆ ಘೋಷಿಸಲಾಗಿದೆ.
ಇನ್ನು ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆ.
Advertisement