ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ವಿವರಣೆ ನೀಡುವಂತೆ ಕಮಲ್ ನಾಥ್ ಸರ್ಕಾರಕ್ಕೆ 'ಸುಪ್ರೀಂ' ಸೂಚನೆ, ವಿಚಾರಣೆ ಮುಂದೂಡಿಕೆ

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ವಿಚಾರ ಸಂಬಂಧ ಬಿಜೆಪಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಮಲ್ ನಾಥ್ ಸರ್ಕಾರಕ್ಕೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಮಧ್ಯ ಪ್ರದೇಶ ಸಿಎಂ ಕಮಲ್ ನಾಥ್
ಮಧ್ಯ ಪ್ರದೇಶ ಸಿಎಂ ಕಮಲ್ ನಾಥ್

ನವದೆಹಲಿ: ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ವಿಚಾರ ಸಂಬಂಧ ಬಿಜೆಪಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಮಲ್ ನಾಥ್ ಸರ್ಕಾರಕ್ಕೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು ಸಂಬಂಧ ಮಾಜಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಸೇರಿದಂತೆ ಇತರೆ ಬಿಜೆಪಿ ನಾಯಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಸಿಎಂ ಕಮಲ್ ನಾಥ್ ಅವರಿಗೆ ಮುಂದಿನ 48 ಗಂಟೆ ಒಳಗೆ ವಿಶ್ವಾಸಮತ ಯಾಚನೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸಿಎಂ ಕಮಲ್ ನಾಥ್ ಸರ್ಕಾರಕ್ಕೆ ಈ ಕುರಿತು ವಿವರಣೆ ನೀಡುವಂತೆ ಸೂಚನೆ ನೀಡಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.

ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್​ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು. ಅಂತೆಯೇ ಇಂದು ವಿಶ್ವಾಸ ಮತಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಅಧಿವೇಶನವನ್ನು ಸ್ಪೀಕರ್​ ನರ್ಮದಾ ಪ್ರಸಾದ್ ಪ್ರಜಾಪತಿ ಮುಂದೂಡಿದ್ದಾರೆ. ಈಗ ವಿಶ್ವಾಸಮತಯಾಚನೆ ಮುಂದೂಡಲ್ಪಟ್ಟಿದ್ದು, ಹೀಗಾಗಿ ರಾಜೀನಾಮೆ ನೀಡಿದ 22 ಶಾಸಕರ ಮನವೊಲಿಸಲು ಸಿಎಂ ಕಮಲನಾಥ್​ ಮತ್ತು ಅವರ ತಂಡಕ್ಕೆ 10 ದಿನ ಸಮಯಾವಕಾಶ ದೊರೆತಿದೆ. 

ಇನ್ನು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ. ಬಿಎಸ್​ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್​ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ. ಹಾಲಿ ಕಾಂಗ್ರೆಸ್​ನಲ್ಲಿ ಕೇವಲ 92 ಶಾಸಕರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com