ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಸಾವು

ತಮಿಳುನಾಡಿನ ತಿರುಪುರ ಸಮೀಪದ ಅವಿನಾಶಿ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುಪುರ: ತಮಿಳುನಾಡಿನ ತಿರುಪುರ ಸಮೀಪದ ಅವಿನಾಶಿ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ 5.30ಕ್ಕೆ ಈ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೊವಾ ಕಾರಿಗೆ ಸಿಮೆಂಟ್ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅವಿನಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಾಲೇಜ್ ಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಈ ಏಳು ವಿದ್ಯಾರ್ಥಿಗಳು ಇನ್ನೊವಾದಲ್ಲಿ ಊಟಿಗೆ ಪ್ರವಾಸ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ರಾಜೇಶ್(21), ಸೂರ್ಯ(21), ವೆಂಕಟ್(21) ಇಳವರಸನ್(21), ವಸಂತ್(21) ಮತ್ತು ಕಾರು ಚಾಲಕ ಮಣಿಕಂಠನ್(29) ಎಂದು ಗುರುತಿಸಲಾಗಿದೆ.

ಕೊಯಮತ್ತೂರಿನಿಂದ 40 ಕಿಮೀ ದೂರದಲ್ಲಿರುವ ಅವಿನಾಶಿಯಲ್ಲಿ ಸಂಭವಿಸಿದ ಈ ದುರ್ಘಟನಾ ಸ್ಥಳಕ್ಕೆ ಕೊಯಮತ್ತೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com