ಮುಂಬೈ: ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ಸು ಮಹಾರಾಷ್ಟ್ರದ ಸೋಲಾಪುರದಿಂದ ಜಾರ್ಖಂಡ್ ಗೆ ಸಂಚರಿಸುತ್ತಿತ್ತು. ಇಂದು ನಸುಕಿನ ಜಾವ 3.30 ಸುಮಾರಿಗೆ ಸೋಲಾಪುರದಿಂದ ನಾಗ್ಪುರ ರೈಲ್ವೆ ನಿಲ್ದಾಣದ ಕಡೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅವರು ನಾಗ್ಪುರ ರೈಲು ನಿಲ್ದಾಣದಿಂದ ಶ್ರಮಿಕ್ ವಿಶೇಷ ರೈಲಿನಲ್ಲಿ ತಮ್ಮೂರು ಜಾರ್ಖಂಡ್ ಗೆ ಹೋಗಲು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ನೂರುಲ್ ಹಸನ್ ತಿಳಿಸಿದ್ದಾರೆ.
ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆಯಿತು. ನಾಲ್ವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಕಸ್ಮಿಕ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.
Advertisement