ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಬುಧವಾರ ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯ್ ವರ್ಗೀಯಾ ಅವರೊಂದಿಗೆ ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ ಅವರಿಗೆ ಪಕ್ಷದ ಕಾರ್ಯಕರ್ತರು ಸ್ವಾಗತಿಸಿದರು.
ಎರಡು ದಿನಗಳ ಭೇಟಿಗಾಗಿ ಪಶ್ಚಿಮ ಬಂಗಾಳ ಆಗಮಿಸುತ್ತಿದ್ದು,ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು, ಜನರು, ಮಾಧ್ಯಮಗಳ ಸ್ನೇಹಿತರು ಮತ್ತು ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ ಎಂದು ಇಂದು ಬೆಳಿಗ್ಗೆ ಶಾ ಟ್ವೀಟ್ ಮಾಡಿದ್ದರು.
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಉಲ್ಬಣಗೊಂಡ ನಂತರ ಕೊಲ್ಕತ್ತಾಕ್ಕೆ ಅಮಿಶಾ ಅವರ ಮೊದಲ ಭೇಟಿ ಇದಾಗಿದೆ. ಮಾರ್ಚ್ 1 ರಂದು ಅವರು ಕೊನೆಯ ಭೇಟಿ ನೀಡಿದ್ದರು.
ಗುರುವಾರ ಬಂಕುರಾಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು, ಅಲ್ಲಿನ ಬಿಜೆಪಿ ಮುಖಂಡರು, ಬುಡಕಟ್ಟು ಸಮುದಾಯದ ವಿವಿಧ ಸದಸ್ಯರೊಂದಿಗೆ ಪಕ್ಷ ಸಂಘಟನೆ ಸಂಬಂಧ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಪ್ರಸಿದ್ಧ ದಕ್ಷಿಣೇಶ್ವರ ಕಾಳಿ ದೇವಾಲಯ ಹಾಗೂ ಶಾಸ್ತ್ರೀಯ ಸಂಗೀತಗಾರ ಅಜಯ್ ಚಕ್ರವರ್ತಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ನಂತರ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
Advertisement