ಹಲ್ದಿಯಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ.
ದೀದಿಯನ್ನು ಬೆಂಬಲಿಸುತ್ತಿರುವ ಸಹೋದರರು ಮುಂದಿನ 6 ತಿಂಗಳಲ್ಲಿ ತಮ್ಮ ನಡೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಇಲ್ಲದೇ ಇದ್ದರೆ ಅವರಿಗೆ ಕೈ-ಕಾಲು ಕಳೆದುಕೊಳ್ಳುವ, ಪ್ರಾಣವನ್ನೂ ಕಳೆದುಕೊಳ್ಳುವ ಭೀತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸಮಾವೇಶವೊಂದರಲ್ಲಿ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿರುವುದನ್ನು ಎನ್ ಡಿ ಟಿವಿ ವರದಿ ಮಾಡಿದೆ.
ಹಲ್ದಿಯಾದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿರುವ ದಿಲೀಪ್ ಘೋಷ್, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅವರು "ರಾಜ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿರುವ ದೀದಿಯ ಸಹೋದರರು ತಮ್ಮನ್ನು ಬದಲಾವಣೆ ಮಾಡಿಕೊಳ್ಳಲಿ ಇಲ್ಲದೇ ಇದ್ದಲ್ಲಿ ಕೈ-ಕಾಲು ಮುರಿದುಕೊಂಡು ಆಸ್ಪತ್ರೆಗೆ ಹೋಗಬೇಕಾಗುತ್ತದೆ, ಇನ್ನೂ ಹೆಚ್ಚು ಮಾಡಿದರೆ ಪ್ರಾಣಕ್ಕೇ ಕುತ್ತು ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಭೇಟಿಯ ಬೆನ್ನಲ್ಲೇ ದಿಲೀಪ್ ಘೋಷ್ ಈ ಹೇಳಿಕೆ ನೀಡಿದ್ದಾರೆ.
Advertisement