ಗಡಿಯಲ್ಲಿ ಉದ್ಧಟತನ: ಪಾಕ್ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿ, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಭಾರತ, ಪಾಕಿಸ್ತಾನದ ದುರ್ವರ್ತನೆ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿ ನಾಗರೀಕರು ಹಾಗೂ ಯೋಧರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಭಾರತ, ಪಾಕಿಸ್ತಾನದ ದುರ್ವರ್ತನೆ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. 

ಪಾಕಿಸ್ತಾನದ ಪಡೆಗಳು ಮುಗ್ಧ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದನ್ನು ಭಾರತವು ತೀವ್ರವಾಗಿ ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ನವೆಂಬರ್ 13ರಂದು ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ನಾಲ್ವರು ನಾಗರೀಕರು ಸಾವನ್ನಪ್ಪುವಂತೆ ಮಾಡಿದ್ದಾರೆ. ಅಲ್ಲದೆ, 19 ಮಂದಿ ಗಾಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ದುರ್ವರ್ತನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ರಾಯಭಾರಿ ಅಧಿಕಾರಿಗೆ ಸಮನ್ಸ ಜಾರಿಗೊಳಿಸಲಾಗಿದ್ದು, ತೀವ್ರ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ. ಎಂದು ಸಚಿವಾಲಯ ಹೇಳಿದೆ. 

ಹಬ್ಬ ಸಂದರ್ಭವನ್ನೇ ಬಳಸಿಕೊಂಡು ಗಡಿಯುದ್ದಕ್ಕೂ ಮುಗ್ಧ ನಾಗರೀಕರ ಮೇಲೆ ಶಸ್ತ್ರಾಸ್ತ್ರಗಳು ಹಾಗೂ ಶೆಲ್ ಗಳ ಮೂಲಕ ದಾಳಿ ನಡೆಸಿ ಜಮ್ಮು ಮತ್ತು ಕಾಶ್ಮೀರದ ಶಾಂತಿ ಕದಡಲು ಹಾಗೂ ಹಿಂಸಾಚಾರ ಸೃಷ್ಟಿಸಲು ಪಾಕಿಸ್ತಾನ ಪ್ರಯತ್ನ ನಡೆಸಿರುವುದು ನಿಜಕ್ಕೂ ಶೋಚನೀಯ ಸಂಗತಿಯಾಗಿದೆ ಎಂದು ತಿಳಿಸಿದೆ. 

ಅಲ್ಲದೆ, ಗಡಿಯಲ್ಲಿ ಉಗ್ರರನ್ನು ಒಳನುಸುಳಿಸಲು ಸತತ ಪ್ರಯತ್ನಗಳು ನಡೆಯುತ್ತಿದ್ದು, ಇದಕ್ಕೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ವರ್ತನೆಗೆ ಭಾರತ ತೀವ್ರವಾಗಿ ಪ್ರತಿಭಟಿಸುತ್ತದೆ ಎಂದು ಹೇಳಿದೆ. 

ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗುರೆಜ್‌ನಲ್ಲಿನ ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆ ನಡೆಸಿದ ಪಾಕಿಸ್ತಾನದ ಸೇನೆ ಅಪ್ರಚೋದಿತ ದಾಳಿ ನಡೆಸಿತ್ತು. ಇದರಲ್ಲಿ ನಾಲ್ವರು ಸೈನಿಕರು ಮತ್ತು ಐದು ಮಂದಿ ನಾಗರಿಕರು ಮೃತಪಟ್ಟಿದ್ದರು. 

ಇದಕ್ಕೂ ಮುನ್ನ ಕೂಡ ಪಾಕಿಸ್ತಾನ ಹಲವು ಬಾರಿ ಕದನ ವಿರಾಮ ಉಲ್ಲಂಘನೆ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸಿದ್ದ ಭಾರತವು ಪಾಕ್ ಸೇನೆಯ 11 ಸೈನಿಕರನ್ನು ಹತ್ಯೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com