ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ: ಪಳನಿಸ್ವಾಮಿ, ಪನ್ನೀರ್ ಸೆಲ್ವಂ

ಮುಂದಿನ ನಾಲ್ಕೈದು ತಿಂಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವುದಾಗಿ ತಮಿಳುನಾಡಿನ ಆಡಳಿತಾರೂಢ ಎಐಡಿಎಂಕೆ ಶನಿವಾರ ಸ್ಪಷ್ಟಪಡಿಸಿದೆ.
ತಮಿಳುನಾಡು ಡಿಸಿಎಂ ಪನ್ನೀರ್ ಸೆಲ್ವಂ
ತಮಿಳುನಾಡು ಡಿಸಿಎಂ ಪನ್ನೀರ್ ಸೆಲ್ವಂ

ಚೆನ್ನೈ: ಮುಂದಿನ ನಾಲ್ಕೈದು ತಿಂಗಳಲ್ಲಿ ಎದುರಾಗುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವುದಾಗಿ ತಮಿಳುನಾಡಿನ ಆಡಳಿತಾರೂಢ ಎಐಡಿಎಂಕೆ ಶನಿವಾರ ಸ್ಪಷ್ಟಪಡಿಸಿದೆ.

ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಜಂಟಿ ಸಂಚಾಲಕ ಎಡಪ್ಪಾಡಿ ಕೆ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ, ಸಂಚಾಲಕ ಓ ಪನ್ನೀರ್ ಸೆಲ್ವಂ ಅವರು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಅವರು ಭಾಗವಹಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ್ದಾರೆ.

ಎಐಎಡಿಎಂಕೆ ಮುಂಬರುವ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದಾಗಿ ಇಬ್ಬರೂ ನಾಯಕರು ಹೇಳಿದ್ದಾರೆ.

ಕೋವಿಡ್‍-19 ಸಾಂಕ್ರಾಮಿಕ ಕಾರಣ ಹೇಳಿ ಬಿಜೆಪಿಯ ವೆಟ್ರಿವೇಲ್‍ ಯಾತ್ರೆಗೆ ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ಎದುರಾಗಬಹುದೆಂಬ ಊಹಾಪೋಹಗಳಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನೀಡಿರುವ ಹೇಳಿಕೆ ತೆರೆ ಎಳೆದಿದೆ.

ತಮಿಳುನಾಡು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಸಮೀಪ ಹೊಸದಾಗಿ ನಿರ್ಮಿಸಿರುವ ಐದನೇ ಜಲಾಶಯವನ್ನು ಇಂದು ರಾಜ್ಯಕ್ಕೆ ಸಮರ್ಪಿಸಿದರು ಮತ್ತು ಚೆನ್ನೈ ಮೆಟ್ರೋ ಎರಡನೇ ಹಂತದ ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ್ದಾರೆ.

ಈ ವೇಳೆ ಮಾತನಾಡಿದ ಅಮಿತ್ ಶಾ, ‘ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ರಾಜ್ಯಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚಾಗಿದೆ. ಈ ವರ್ಷ ಉತ್ತಮ ಆಡಳಿತ ರಾಜ್ಯಗಳಲ್ಲಿ ತಮಿಳುನಾಡು ಪ್ರಥಮ ಸ್ಥಾನ ಪಡೆದಿರುವುದಕ್ಕೆ ನನಗೆ ಸಂತೋಷವಾಗಿದೆ’ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com