ಚೆನ್ನೈ: ತಮಿಳು ನಾಡು ರಾಜಕೀಯದಲ್ಲಿ ಎಲ್ಲವೂ ಸುಖಾಂತ್ಯವಾಗುವ ಲಕ್ಷಣ ಕಾಣುತ್ತಿದೆ. ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.
ಮುಂದಿನ ವರ್ಷದ ಏಪ್ರಿಲ್-ಮೇ ಅವಧಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ.
ಇಂದು ನಸುಕಿನ ಜಾವ 3.30ರವರೆಗೆ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ ಮಧ್ಯೆ ಮಾತುಕತೆ ಮುಂದುವರಿದಿತ್ತು. ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇಲ್ಲಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಎಐಎಡಿಎಂಕೆ ಸಂಚಾಲಕ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹಾಗೂ ಸಹ ಸಂಚಾಲಕ ಮತ್ತು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಪ್ರಕಟಿಸಿದ್ದಾರೆ. ಇದೇ ವೇಳೆ ಪಕ್ಷಕ್ಕೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಮಾರ್ಗದರ್ಶನ ನೀಡುವುದಕ್ಕಾಗಿ 11 ಸದಸ್ಯರ ಪರಿಶೀಲನಾ ಸಮಿತಿಯನ್ನೂ ರಚಿಸಲಾಗಿದೆ.
ಮುಂದಿನ ದಿನಗಳಲ್ಲೂ ರಾಜ್ಯದ ಜನರು ಮತ್ತು ಪಕ್ಷದ ಕಾರ್ಯಕರ್ತರ ಹಿತಕ್ಕೆ ಬದ್ಧವಾಗಿರುವುದಾಗಿ ಪಳನಿಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಇದುವರೆಗೆ ಎಲ್ಲವೂ ಸರಿಯಾಗಿ ನಡೆದಿದೆ. ಮುಂದೆಯೂ ಇದೇ ರೀತಿ ಸಾಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಪಕ್ಷಕ್ಕೆ ಪ್ರಮುಖ ಸಲಹೆಗಳನ್ನು ನೀಡಲು ಸಮಿತಿ ರಚಿಸುವ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಕಳೆದ ತಿಂಗಳ 28ರಂದು ನಡೆದ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಮಾತಿನ ಚಕಮಕಿ ನಡೆದಿತ್ತು.
2016ರಲ್ಲಿ ಮುಖ್ಯಮಂತ್ರಿಯಾಗಿದ್ದ ಜೆ ಜಯಲಲಿತಾ ನಿಧನದ ನಂತರ, 2017ರಲ್ಲಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಎರಡೂ ಬಣಗಳು ಒಂದಾಗಿ, ಶಶಿಕಲಾ ಬಣವನ್ನು ಪಕ್ಷದಿಂದ ಹೊರಗಟ್ಟಿದ್ದವು.
Advertisement