ನವದೆಹಲಿ: ರೈತರ ಭತ್ತದ ಬೆಳೆಗೆ ಸೂಕ್ತ ಖರೀದಿ ದರವನ್ನು ಉತ್ತರ ಪ್ರದೇಶ ಸರ್ಕಾರ ನಿಗದಿಪಡಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ತೀವ್ರ ಪ್ರತಿಭಟನೆ ಕೈಗೊಳ್ಳಲಿದೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದ ಉಸ್ತುವಾರಿಯೂ ಆಗಿರುವ ಅವರು, ‘ಭತ್ತದ ಖರೀದಿ ಪ್ರಮಾಣ ರಾಜ್ಯದಲ್ಲಿ ತೀವ್ರವಾಗಿ ಕುಸಿದಿದೆ. ರೈತರು ಆತಂಕದಲ್ಲಿಇದ್ದಾರೆ’ ಎಂದು ಟೀಕಿಸಿದ್ದಾರೆ.
ಅಲ್ಪಪ್ರಮಾಣದಲ್ಲಿ ಖರೀದಿ ಪ್ರಕ್ರಿಯೆ ನಡೆದಿದೆ. ಖರೀದಿ ದರವೂ ಕಡಿಮೆ ಇದೆ. ಇಂಥ ಸ್ಥಿತಿಯಲ್ಲಿ ತೇವಾಂಶದ ಹೆಸರಿನಲ್ಲಿ ರೈತರನ್ನು ಶೋಷಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗೋಧಿಗಿಂತಲೂ ಭತ್ತದ ದರ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.
ಉತ್ತರ ಪ್ರದೇಶ ಸರ್ಕಾರ ತಕ್ಷಣೇ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವು ತೀವ್ರ ಹೋರಾಟವನ್ನು ಆರಂಭಿಸಲಿದೆ ಎಂದು ಎಚ್ಚರಿಸಿದರು. ಇತ್ತಿಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.
Advertisement