ಉತ್ತರ ಪ್ರದೇಶ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ

ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಬಿಜೆಪಿ ಮುಖಂಡ ಡಿಕೆ ಗುಪ್ತಾ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಶನಿವಾರ ಪ್ರಮುಖ ಆರೋಪಿ ಸೇರಿ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಬಿಜೆಪಿ ಮುಖಂಡ ಡಿಕೆ ಗುಪ್ತಾ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಶನಿವಾರ ಪ್ರಮುಖ ಆರೋಪಿ ಸೇರಿ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಕಳೆದ ರಾತ್ರಿ ಡಿಕೆ. ಗುಪ್ತಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುಪ್ತಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. 

ಹತ್ಯೆಗೀಡಾದ ಗುಪ್ತಾ ಅವರು ಫಿರೋಜಾಬಾದ್ ಮಂಡಲ್ (ವಾರ್ಡ್)ನ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ತುಂಡ್ಲಾ ವಿಧಾನಸಭೆ ಕ್ಷೇತ್ರಕ್ಕೆ ನವೆಂಬರ್ 3 ರಂದು ಉಪಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಸಲುವಾಗಿ ಆ ಕ್ಷೇತ್ರಕ್ಕೆ ತೆರಳಿದ್ದರು. ಈ ವೇಳೆ ಬೈಕ್ ನಲ್ಲಿದ್ದ ಬಂದಿದ್ದ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಹತ್ಯೆ ಪ್ರಕರಣಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದು, ಉತ್ತರಪ್ರದೇಶ ಕೆಲವೆಡೆ ಪ್ರತಿಭಟನೆಗಳೂ ಕೂಡ ಭುಗಿಲೆದ್ದಿವೆ. ಈ ನಡುವಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಪ್ರಕರಣದ ಪ್ರಮುಖ ಆರೋಪಿ ಸೇರಿ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com