ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೂರು ಕೃಷಿ ಮಸೂದೆಗಳು ಹಾಗೂ ಕೋವಿಡ್-19 ನಿರ್ವಹಣೆ, ಆರ್ಥಿಕ ಹಿಂಜರಿತ, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿರುವ ಸೋನಿಯಾ ಗಾಂಧಿ ಭಾರತದ ಪ್ರಜಾಪ್ರಭುತ್ವ ತೀವ್ರ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದು, ಹಸಿರು ಕ್ರಾಂತಿಯ ಲಾಭವನ್ನು ಸೋಲಿಸುವುದಕ್ಕಾಗಿ ಪಿತೂರಿ ನಡೆಸಲಾಗಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯಗಳ ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿರುವ ಸೋನಿಯಾ ಗಾಂಧಿ, ದೇಶದ ಜನತೆಯ ಹಕ್ಕುಗಳನ್ನು ವ್ಯವಸ್ಥಿತವಾಗಿ ಬಂಡವಾಳಶಾಹಿಗಳ ಕೈಲಿ ಇಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿರುವ ಸೋನಿಯಾ ಗಾಂಧಿ, ಕಾನೂನನ್ನು ಗೌರವಿಸಿ ಭಾರತೀಯ ಹೆಣ್ಣುಮಕ್ಕಳಿಗೆ ಹೆಚ್ಚಿನ ಭದ್ರತೆ ನೀಡುವುದರ ಬದಲು ಬಿಜೆಪಿ ಸರ್ಕಾರಗಳು ಅಪರಾಧಿಗಳ ಪರ ವಹಿಸುತ್ತಿವೆ. ಸರ್ಕಾರಗಳ ಸಂಸ್ಥೆಗಳನ್ನು ಬಳಸಿಕೊಂಡು ತುಳಿತಕ್ಕೊಳಗಾದ ಕುಟುಂಬಗಳ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂದು ಸೋನಿಯಾ ಗಾಂಧಿ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.
Advertisement