ನವದೆಹಲಿ: ಮೂರು ಹಂತದ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಗುರುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಭರವಸೆ ನೀಡಿದೆ. ಬಿಜೆಪಿಯ ಈ ಭರವಸೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ.
ಇದೇನಾ ನಿಮ್ಮ ಕೋವಿಡ್ ಲಸಿಕೆ ವಿತರಣಾ ಕಾರ್ಯತಂತ್ರ? ಕೇಂದ್ರ ಸರ್ಕಾರ ಈಗಷ್ಟೇ ತನ್ನ ಕೋವಿಡ್ ಲಸಿಕೆ ವಿತರಣಾ ಕಾರ್ಯತಂತ್ರ ಘೋಷಿಸಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ರಾಹುಲ್ ಗಾಂಧಿ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಸುಳ್ಳು ಭರವಸೆಗಳೊಂದಿಗೆ ನೀವು ಅದನ್ನು ಯಾವಾಗ ಪಡೆಯುತ್ತೀರಿ ಎಂದು ತಿಳಿಯಲು ದಯವಿಟ್ಟು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಉಲ್ಲೇಖಿಸಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ಬಿಹಾರ ವಿಧಾನಸಭೆಗೆ ಬಿಜೆಪಿ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೋವಿಡ್-19 ಲಿಸಿಕೆಗೆ ಐಸಿಎಂಆರ್ ಅನುಮತಿ ನೀಡಿದ ತಕ್ಷಣ ಬಿಹಾರದ ಎಲ್ಲರಿಗೂ ಉಚಿತ ಲಸಿಕೆ ನೀಡುವ ಭರವಸೆ ನೀಡಿದ್ದರು.
Advertisement