ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತನನ್ನು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದು ರಾಜಕೀಯ ಹಿಂಸಾಚಾರ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು, ಟಿಎಂಸಿ ಕಾರ್ಯಕರ್ತನ ಮನೆ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ. ಆದರೆ ಇದು ರಾಜಕೀಯ ಹಿಂಸಾಚಾರ ಎಂಬ ಆರೋಪವನ್ನು ಪೊಲೀಸರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಈ ಇಬ್ಬರು ನೆರೆಹೊರೆಯವರಾಗಿದ್ದು, ಭೂ ವಿವಾದದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಬಾಗ್ನಾನ್ ಪೊಲೀಸ್ ಠಾಣೆ ಪ್ರದೇಶದ ಚಂದನಪರದಲ್ಲಿ ಈ ಘಟನೆ ನಡೆದಿದ್ದು, 52 ವರ್ಷದ ಹೂವಿನ ವ್ಯಾಪಾರಿ ಕಿಂಕರ್ ಮಾಝಿ ಶನಿವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ, ಅವರನ್ನು ತಡೆದ ಟಿಎಂಸಿ ಕಾರ್ಯಕರ್ತ ಹಾಗೂ ಇತರೆ ವ್ಯಕ್ತಿಗಳು ತುಂಬಾ ಹತ್ತಿರದಿಂದಲೇ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮಾಝಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement