ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಮ್ ಆದ್ಮಿ ಸರ್ಕಾರ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಕೊರೋನಾ ವೈರಸ್ ಪ್ರಕರಣಗಳು ಕಂಡುಬಂದಿವೆ ಎಂದು ಕೇಜ್ರಿವಾಲ್ ಆನ್ ಲೈನ್ ಮಾಧ್ಯಮದಲ್ಲಿ ವಿವರಿಸಿದ್ದಾರೆ.
ಜನರು ನಿರ್ಲಕ್ಷ್ಯ ತೋರದೆ ಕೋವಿಡ್-19 ವಿರುದ್ಧದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಕೈಗೊಂಡ ಅನೇಕ ಕ್ರಮಗಳಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸಾವಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.
ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿಲ್ಲ, 14 ಸಾವಿರ ಹಾಸಿಗೆಗಳ ಪೈಕಿಯಲ್ಲಿ 5 ಸಾವಿರ ಹಾಸಿಗೆಗಳನ್ನು ಮಾತ್ರ ಪಡೆಯಲಾಗಿದೆ. ಈ ಪೈಕಿ 1600 ರಿಂದ 1700 ಹಾಸಿಗೆಗಳನ್ನು ಇತರ ರಾಜ್ಯಗಳಿಗೆ ಸೇರಿದ ರೋಗಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ 69 ದಿನಗಳಲ್ಲಿ ಅತಿ ಹೆಚ್ಚು ಎನ್ನಬಹುದಾದ ದಾಖಲೆಯ 2,914 ಹೊಸ ಪ್ರಕರಣಗಳು ಕಂಡುಬಂದಿದ್ದವು.
Advertisement